ಬೆಂಗಳೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್ಟಿಇ) ದಾಖಲಾಗಿದ್ದ ದೂರುಗಳ ವಿಚಾರಣೆಯನ್ನು ಮಂಗಳವಾರ ನಡೆಸಿತು.
ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಅಶೋಕ್ ಬಿ.ಹಿಂಚಿಗೇರಿ ಮತ್ತು ಮನೋಹರ್ ಅವರು ಅಹವಾಲುಗಳ ವಿಚಾರಣೆ ನಡೆಸಿದರು.
ಏಪ್ರಿಲ್ನಿಂದ ಇಲ್ಲಿಯವರೆಗೆ ಆಯೋಗಕ್ಕೆ 40ಕ್ಕೂ ಹೆಚ್ಚು ದೂರುಗಳು ಬಂದಿದ್ದವು. ಇವುಗಳಲ್ಲಿ ಶುಲ್ಕ ಪಾವತಿಗೆ ಸಂಬಂಧಿಸಿದ, ಆರ್ಟಿಇ ಮಕ್ಕಳಿಗೆ ತಾರತಮ್ಯ ಮಾಡಿದ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಗಳು ಹೆಚ್ಚಾಗಿದ್ದವು.
ಕೆಲವು ಪ್ರಕರಣಗಳ ಕುರಿತು ಆಯೊಗವೇ ಕ್ರಮ ಕೈಗೊಳ್ಳಬಹುದು ಎಂದು ನಿವೃತ್ತ ನ್ಯಾಯಮೂರ್ತಿಗಳು ತಿಳಿಸಿದರು. ಇನ್ನು ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಗೆ ಪತ್ರ ಬರೆಯುವಂತೆ ನಿರ್ದೇಶನ ನೀಡಿದರು.
‘ನಾವು ಇಲ್ಲಿ ಯಾರ ಪರವಾಗಿಯೂ ವಿಚಾರಣೆ ನಡೆಸಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಲು ಪ್ರಯತ್ನಿಸಿದ್ದೇವೆ’ ಎಂದು ಅಶೋಕ್ ತಿಳಿಸಿದರು.
ಆಯೋಗದ ಅಧ್ಯಕ್ಷೆ ಕೃಪಾ ಆಳ್ವ, ‘ಅಹವಾಲು ವಿಚಾರಣೆ ವೇಳೆ ಹಾಜರಿರುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದೆವು. ಹಾಜರಾಗದ ಅಧಿಕಾರಿಗಳಿಂದ ಶಿಕ್ಷಣ ಇಲಾಖೆಯ ನಿರ್ದೇಶಕರು ವಿವರಣೆ ಪಡೆದು ಕ್ರಮ ಕೈಗೊಳ್ಳಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.