ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮೋನೇಶ್ (34) ಹಾಗೂ ಅವರ ತಾಯಿ ಸುಂದರಮ್ಮ (60) ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಂಬಂಧ ಕೋಲಾರ ಜಿಲ್ಲಾ ವಿಶೇಷ ದಳದ ಇನ್ಸ್ಪೆಕ್ಟರ್ ಚಂದ್ರಪ್ಪ ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
‘ತಮ್ಮ ತಂಗಿಯನ್ನು ಪ್ರೀತಿ ಮಾಡುತ್ತಿದ್ದ ಎಂಬ ಕಾರಣಕ್ಕೆ ಚಂದ್ರಪ್ಪ, ನನ್ನ ಪತಿ ಹಾಗೂ ಅತ್ತೆಯನ್ನು ಅಕ್ರಮ ಬಂಧನದಲ್ಲಿಟ್ಟಿದ್ದರು. ಜೀವ ಬೆದರಿಕೆ ಒಡ್ಡಿದ್ದರು’ ಎಂದು ಮೋನೇಶ್ ಪತ್ನಿ ಶ್ರೀದೇವಿ ದೂರು ನೀಡಿದ್ದಾರೆ. ‘ದೂರಿನ ಅನ್ವಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿ
ದ್ದೇವೆ’ ಎಂದು ಪೊಲೀಸರು ತಿಳಿಸಿದರು.
‘ಕಾಡುಗೋಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಪ್ಪ, 2017ರ ಜೂನ್ನಲ್ಲಿ ಕೋಲಾರ ಜಿಲ್ಲಾ ವಿಶೇಷ ದಳಕ್ಕೆ ವರ್ಗವಾಗಿದ್ದರು. ಅವಿವಾಹಿತರಾಗಿದ್ದ ಅವರು, ಬೆಳತ್ತೂರಿನ ‘ಎಂಪ್ರೆಸ್’ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ತಂಗಿಯೊಂದಿಗೆ ನೆಲೆಸಿದ್ದರು. ಫೆ.17ರಂದು ತಂಗಿಯು ಮನೆ ಬಿಟ್ಟು ಹೋಗಿದ್ದರು. ನಾಪತ್ತೆ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿತ್ತು.
‘ತಂಗಿ ಕಾಣೆಯಾಗಲು ಮೋನೇಶ್ ಕಾರಣ ಎಂದು ಭಾವಿಸಿದ್ದ ಆರೋಪಿ, ತಾಯಿ ಮಗನನ್ನು ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಕೂಡಿಟ್ಟಿದ್ದರು. ಮಾ.6ರಂದು ಬೆಳಿಗ್ಗೆ 5.30ರ ಸುಮಾರಿಗೆ ಮಗ ಹಾಗೂ ತಾಯಿ ಐದನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಯಾರಾದರೂ ತಳ್ಳಿ ಹತ್ಯೆಗೈದಿದ್ದಾರೋ ಎಂಬುದನ್ನು ತಿಳಿದುಕೊಳ್ಳಲು ತನಿಖೆಮುಂದುವರಿಸಿದ್ದೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.