ADVERTISEMENT

ಉದ್ಯೋಗ ಕಾಯಂಗೊಳಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಜುಲೈ 2017, 19:30 IST
Last Updated 17 ಜುಲೈ 2017, 19:30 IST
ಮೈಸೂರು ಬ್ಯಾಂಕ್ ವೃತ್ತದ ಬಳಿ ಸೋಮವಾರ ಹೊರ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು
ಮೈಸೂರು ಬ್ಯಾಂಕ್ ವೃತ್ತದ ಬಳಿ ಸೋಮವಾರ ಹೊರ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು   

ಬೆಂಗಳೂರು: ನೇರ ನೇಮಕಾತಿ ಪ್ರಕ್ರಿಯೆ ಕೈಬಿಟ್ಟು ಗುತ್ತಿಗೆ ನೌಕರರನ್ನೇ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ಗುತ್ತಿಗೆ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.

‘ಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಅಗತ್ಯವಿರುವ ನಿಯಮಗಳಿಗೆ ತಿದ್ದುಪಡಿ ಮಾಡಬೇಕು. ಹೊರ ಗುತ್ತಿಗೆ ಪದ್ಧತಿ ರದ್ದುಪಡಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ, ಇಎಸ್‌ಐ, ಭವಿಷ್ಯ ನಿಧಿ, ಹಾಗೂ ರಾತ್ರಿಪಾಳಿಯ ಭತ್ಯೆ ನೀಡಬೇಕು’ ಎಂದು ಧರಣಿನಿರತರು ಆಗ್ರಹಿಸಿದರು.

‘ನೌಕರರ ವೇತನ ಕಡಿಮೆ ಇದ್ದು, ಅದನ್ನು ಪರಿಷ್ಕರಿಸಬೇಕು. ವಿದ್ಯುತ್ ಅವಘಡಕ್ಕೀಡಾಗಿ ಸಾವನ್ನಪ್ಪುವ ನೌಕರರ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ಹಾಗೂ ಅವರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಲ್ಲಿ ಸಾವಿರಾರು ಗುತ್ತಿಗೆ ನೌಕರರು ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲಾಖೆಯು ನೇರ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದರಿಂದ ಸದ್ಯ ಅವರೆಲ್ಲರೂ ಕೆಲಸ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ’ ಎಂದು ಸಂಘದ ಅಧ್ಯಕ್ಷ ಕೆ.ಸೋಮಶೇಖರ್‌ ಅಸಮಾ
ಧಾನ ವ್ಯಕ್ತಪಡಿಸಿದರು.

ಸಚಿವರಿಗೆ ಮನವಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದ ಮುಖಂಡರು, ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.

‘ಸೇವಾಭದ್ರತೆ, ವೇತನ ಪರಿಷ್ಕರಣೆ ಬಗ್ಗೆ ಚರ್ಚೆ ನಡೆಸಿ ನ್ಯಾಯ ಒದಗಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ’ ಎಂದು ಮುಖಂಡರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.