ADVERTISEMENT

ಉಪನಗರ ವರ್ತುಲ ರಸ್ತೆ ಯೋಜನೆಗೆ ಮರುಜೀವ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 20:17 IST
Last Updated 10 ಅಕ್ಟೋಬರ್ 2017, 20:17 IST

ಬೆಂಗಳೂರು: ಉಪನಗರ ವರ್ತುಲ ರಸ್ತೆ (ಎಸ್‌ಟಿಆರ್‌ಆರ್‌) ಯೋಜನೆ ಮತ್ತೆ ಜೀವ ಪಡೆದಿದೆ. ಇದಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಎಂಆರ್‌ಡಿಎ) ಸೂಚಿಸಿದ್ದಾರೆ.

ಮುಖ್ಯಮಂತ್ರಿ ನೇತೃತ್ವದಲ್ಲಿ ಮಂಗಳವಾರ ನಡೆದ ಬಿಎಂಆರ್‌ಡಿಎ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಯೋಜನೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

‘ಎಸ್‌ಟಿಆರ್‌ಆರ್‌ ಯೋಜನೆ ಅಡಿ ನಗರದ ಕೇಂದ್ರ ಭಾಗದಿಂದ 30 ಕಿ.ಮೀ ಅಂತರದಲ್ಲಿ ಇನ್ನೊಂದು ವರ್ತುಲ ರಸ್ತೆ ನಿರ್ಮಾಣವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಈ ಯೋಜನೆ ನೆರವಾಗಲಿದೆ. ಹೊಸಕೋಟೆ, ಹಾರೊಹಳ್ಳಿ, ತಾವರೆಕೆರೆ ಹಾಗೂ ನೆಲಮಂಗಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಗುರುತಿಸಿ ದಶಕಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿತ್ತು. ಈಗಾಗಲೇ ಗುರುತಿಸಿರುವ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಬಿಎಂಆರ್‌ಡಿಎ ಶೀಘ್ರವೇ ಡಿಪಿಆರ್‌ ಸಿದ್ಧಪಡಿಸಲಿದೆ’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಈ ಯೋಜನೆಗೆ ಜಾಗಗಳನ್ನು ಗುರುತಿಸಿ 2007ರ ಸೆಪ್ಟೆಂಬರ್‌ನಲ್ಲೇ ಅಧಿಸೂಚನೆ ಹೊರಡಿಸಲಾಗಿತ್ತು.

‘ಅಧಿಸೂಚನೆ ಹೊರಡಿಸಿರುವ ಪ್ರದೇಶಗಳಲ್ಲಿ ಸುಮಾರು 800 ನಾಗರಿಕ ಸೌಲಭ್ಯ ನಿವೇಶನಗಳೂ ಇವೆ. ಇವುಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಲಾಗುವುದು’ ಎಂದು ಸಚಿವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.