ADVERTISEMENT

ಎಚ್‌ಡಿಕೆ ವಿರುದ್ಧ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 4 ಜುಲೈ 2012, 19:30 IST
Last Updated 4 ಜುಲೈ 2012, 19:30 IST

ಬೆಂಗಳೂರು: ಬನಶಂಕರಿ ಐದನೇ ಹಂತದ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಇತರೆ 18 ಮಂದಿ ವಿರುದ್ಧ ಸಲ್ಲಿಸಲಾಗಿದ್ದ ಖಾಸಗಿ ದೂರಿನ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ.

ಹಲಗೆವಡೇರಹಳ್ಳಿಯ ಸರ್ವೆ ನಂಬರ್ 128 ಮತ್ತು 137ರಲ್ಲಿ 2.24 ಎಕರೆ ಭೂಮಿಯನ್ನು ಬಿಡಿಎ 1995ರಲ್ಲಿ ಸ್ವಾಧೀನಪಡಿಸಿಕೊಂಡಿತ್ತು. ಭೂಮಿ ಬಿಡಿಎ ವಶದಲ್ಲಿರುವಾಗಲೇ ಮೂಲ ಮಾಲೀಕರಾದ ಪದ್ಮಾ, ಶ್ರೀದೇವಿ ಮತ್ತು ಚೇತನ್‌ಕುಮಾರ್ ಅವರು ಶಾಂತಮ್ಮ ಹಾಗೂ ರೇಖಾ ಚಂದ್ರಶೇಖರ್ ಎಂಬುವರಿಗೆ ಮಾರಾಟ ಮಾಡಿದ್ದರು. ಬಳಿಕ ಖರೀದಿದಾರರು ಬೇರೆ ಎಂಟು ಮಂದಿಗೆ ಮಾರಿದರು. ಅಲ್ಲಿಂದ ರಿಯಲ್ ಎಸ್ಟೇಟ್ ಕಂಪೆನಿಯೊಂದಕ್ಕೆ ಈ ಭೂಮಿ ಪರಭಾರೆ ಆಗಿತ್ತು ಎಂಬ ಆರೋಪ ದೂರಿನಲ್ಲಿದೆ.

ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕಡತವನ್ನು ಮೂರು ಬಾರಿ ವಾಪಸ್ ಕಳುಹಿಸಲಾಗಿತ್ತು. ಆದರೆ, 2007ರ ಸೆಪ್ಟೆಂಬರ್ 25ರಂದು ದಿಢೀರನೆ ಕಡತ ವಾಪಸ್ ತರಿಸಿಕೊಂಡ ಕುಮಾರಸ್ವಾಮಿ, ಅರ್ಜಿದಾರರ ಪರವಾಗಿ ಆದೇಶವನ್ನು ಹೊರಡಿಸಿದ್ದಾರೆ.
 ಈ ಕ್ರಮದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 55 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.