ADVERTISEMENT

ಎಬಿವಿಪಿಯಿಂದ ಇಂದು ಉಪವಾಸ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2011, 19:40 IST
Last Updated 16 ಫೆಬ್ರುವರಿ 2011, 19:40 IST

ಬೆಂಗಳೂರು: ‘ಕಾಂಗ್ರೆಸ್ ನೇತೃತ್ವದ ಕೇಂದ್ರ ಯುಪಿಎ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಭೂಹಗರಣವನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಫೆ.17ರ ಮಧ್ಯಾಹ್ನ 12ರಿಂದ ಫೆ.18ರ ಮಧ್ಯಾಹ್ನ 12ರವರೆಗೆ ಹಗಲು-ರಾತ್ರಿ ಉಪವಾಸ ಸತ್ಯಾಗ್ರಹವನ್ನು ಏಕಕಾಲಕ್ಕೆ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ನಡೆಸಲಿದೆ’ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2ಜಿ ಸ್ಪೆಕ್ಟ್ರಂ ಮತ್ತು ಕಾಮನ್‌ವೆಲ್ತ್ ಹಗರಣಗಳಲ್ಲಿ ಬರೀ ಮಾಜಿ ಸಚಿವ ಎ.ರಾಜಾ ಹಾಗೂ ಸುರೇಶ್ ಕಲ್ಮಾಡಿ ಭಾಗಿಯಾಗಿಲ್ಲ. ನಿಜವಾದ ತಪ್ಪಿತಸ್ಥರನ್ನು ಪತ್ತೆ ಮಾಡಿ ಸೂಕ್ತ ಶಿಕ್ಷೆ ನೀಡಬೇಕು.ಹಾಗೆಯೇ ರಾಜ್ಯದ ಭೂಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿ ಈ ಉಪವಾಸ ಹಮ್ಮಿಕೊಳ್ಳಲಾಗಿದ್ದು, ಗುರುವಾರ ನಗರದ ಟೌನ್‌ಹಾಲ್ ವೃತ್ತದ ಬಳಿ 24 ಗಂಟೆಗಳ ಉಪವಾಸದಲ್ಲಿ ಸಂಘಟನೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದರು.

‘ಮಾರ್ಚ್ 13-15ರವರೆಗೆ ಗದಗದಲ್ಲಿ ನಡೆಯಲಿರುವ ರಾಜ್ಯ ಸಮ್ಮೇಳನದಲ್ಲಿ ರಾಜ್ಯದಲ್ಲಿ ಇಲ್ಲಿಯವರೆಗೆ ನಡೆದ ಭೂಗಹಗರಣದ ಬಗ್ಗೆ ನಿರ್ಣಯ ಅಂಗೀಕರಿಸಲಾಗುವುದು’ ಎಂದು ಅವರು ಹೇಳಿದರು.ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ತಮ್ಮೇಶ್‌ಗೌಡ ಮಾತನಾಡಿ, ‘ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಲು ಹಿರಿಯ ಸಂಶೋಧಕ ಡಾ.ಎಂ.ಚಿದಾನಂಮೂರ್ತಿ, ಖ್ಯಾತ ವರ್ಣಚಿತ್ರಕಲಾವಿದ ಬಿ.ಕೆ.ಎಸ್.ವರ್ಮಾ ಅವರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.