ಬೆಂಗಳೂರು: ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ನಗರದ ಹಲವೆಡೆ ಬುಧವಾರ ಪ್ರತಿಭಟನೆ ನಡೆಸಿದರು.
ಮಲ್ಲೇಶ್ವರ 18ನೇ ಅಡ್ಡರಸ್ತೆ, ವರ್ತೂರು ಮತ್ತು ಸೌತ್ ಎಂಡ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, `ರಾಜ್ಯದ ಖಾಸಗಿ ಶಾಲಾ ಕಾಲೇಜುಗಳ ಪ್ರವೇಶ ನೀತಿ, ಶುಲ್ಕ ನೀತಿಗಳಿಂದ ವಿದ್ಯಾರ್ಥಿಗಳ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತಷ್ಟು ಖಾಸಗಿ ವಿವಿಗಳ ಸ್ಥಾಪನೆಗೆ ಮುಂದಾಗಿದೆ. ಆದರೆ, ಇದರಿಂದಾಗುವ ಪರಿಣಾಮದ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ಜಿಲ್ಲೆಯ ಎಬಿವಿಪಿ ಸಂಚಾಲಕ ಪ್ರಶಾಂತ್, `ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಖಾಸಗಿ ವಿವಿಗಳ ಸ್ಥಾಪನೆಗೆ ವಿಧೇಯಕ ಮಂಡನೆಯಾಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಪೂರ್ವತಯಾರಿ ಇಲ್ಲದೇ, ಸರ್ಕಾರ ಈ ರೀತಿಯ ಆತುರದ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ' ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.