ADVERTISEMENT

ಎಲ್ಲರೂ ವಿದ್ಯಾವಂತರಾದರೆಜಾತಿ ನಾಶ: ಸಿದ್ದಲಿಂಗಯ್ಯ

​ಪ್ರಜಾವಾಣಿ ವಾರ್ತೆ
Published 31 ಮೇ 2012, 19:30 IST
Last Updated 31 ಮೇ 2012, 19:30 IST

ಬೆಂಗಳೂರು: `ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ~ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಮತ್ತು ಎಸ್ಟಿ ನೌಕರರ ಸಮನ್ವಯ ಸಮಿತಿಯು ಗುರುವಾರ ಕೆ.ಜಿ.ಎಸ್.ಕ್ಲಬ್‌ನ ಬಿ.ಚನ್ನಬಸಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನರು ಅವಿದ್ಯಾವಂತರಾಗಿದ್ದಾರೆ. ಇದರಿಂದ ಅವರಿನ್ನೂ ಅಜ್ಞಾನ ಭಾವದಲ್ಲಿಯೇ ಬಾಳುತ್ತಿದ್ದಾರೆ. ಮೇಲು ಕೀಳು ಎಂಬ ಭಾವ ಅಲ್ಲಿ ಇನ್ನೂ ಜೀವಂತವಾಗಿದೆ~ ಎಂದರು.
`ಜಾತಿ ಭಾವವನ್ನು ಹೋಗಲಾಡಿಸಬೇಕೆಂದರೆ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ವಿದ್ಯಾವಂತರಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ತಮ್ಮ ಘನತೆಯನ್ನು ಹೆಚ್ಚಿಸಿಕೊಳ್ಳಬೇಕು~ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಕಮಲಮ್ಮ ಮಾತನಾಡಿ, `ಅಂಬೇಡ್ಕರ್ ಅವರು ನಡೆದ ದಾರಿ ನಮಗೆ ಇಂದಿಗೂ ಮಾರ್ಗದರ್ಶಕವಾಗಿದೆ. ಅವರು ಹಾಕಿಕೊಟ್ಟ ಆದರ್ಶದ ಬದುಕನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಸಂಘಟಿತರಾಗಿ ಹೋರಾಡಬೇಕು~ ಎಂದರು.

ಕಾರ್ಯಕ್ರಮದಲ್ಲಿ ಗಾಯಕ ಬಾನಂದೂರು ಕೆಂಪಯ್ಯ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಯು.ಡಿ.ನರಸಿಂಹಯ್ಯ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಮಹಾದೇವ ಮಠಪತಿ, ಸಚಿವಾಲಯ ಎಸ್ಸಿ ಮತ್ತು ಎಸ್ಟಿ ನೌಕರರ ಸಂಘದ ಅಧ್ಯಕ್ಷ ಎಚ್.ಕೆ.ರವಿಮೂರ್ತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.