ADVERTISEMENT

ಎಲ್‌ಪಿಜಿ ದರ ಹೆಚ್ಚಳ: ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 20:19 IST
Last Updated 8 ಜನವರಿ 2014, 20:19 IST

ಬೆಂಗಳೂರು: ಆಟೊ ಎಲ್‌ಪಿಜಿ ಸೇರಿ­ದಂತೆ ತೈಲೋತ್ಪನ್ನಗಳ ಬೆಲೆ ಹೆಚ್ಚಳದ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯ­ಕರ್ತರು ನಗರದ ಪುರ­ಭವನದ ಬಳಿ ಬುಧವಾರ ಪ್ರತಿಭಟನೆ ಮಾಡಿ­ದರು.

ಪ್ರತಿಭಟನಾಕಾರರು ಪುರಭವನದ ಮುಂಭಾಗದಲ್ಲಿ ಸಾಂಕೇತಿಕವಾಗಿ ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸು ವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮತ್ತೊಂದೆಡೆ ಅಡುಗೆ ಅನಿಲ, ಪೆಟ್ರೋಲ್‌ ಹಾಗೂ ಡೀಸೆಲ್‌ ದರವನ್ನು ಪದೇ ಪದೇ ಹೆಚ್ಚಿಸುತ್ತಿದೆ. ಇದರಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಂಸದ ಅನಂತಕುಮಾರ್‌ ದೂರಿದರು.

ಶಾಸಕ ಆರ್‌.ಅಶೋಕ ಮಾತನಾಡಿ, ‘ಭ್ರಷ್ಟಾಚಾರದಲ್ಲಿ ಮುಳುಗಿರುವ ಕೇಂದ್ರ ಸರ್ಕಾರ ಜನಸಾಮಾನ್ಯರ ಬದು­ಕನ್ನು ಹಾಳು ಮಾಡಿದೆ. ಜನವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್‌ ಬಡವರ ಜೀವನದೊಂದಿಗೆ ಚೆಲ್ಲಾಟ­ವಾಡುತ್ತಿದೆ’ ಎಂದರು.

ಅನಂತಕುಮಾರ್‌ ಮತ್ತು ಅಶೋಕ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಪುರಭವನದ ಬಳಿಯಿಂದ ನರಸಿಂಹ­ರಾಜ ಚೌಕದವರೆಗೆ ಆಟೊ ಎಳೆದು­ಕೊಂಡು ಹೋಗುವ ಮೂಲಕ ತೈಲೋ­ತ್ಪನ್ನಗಳ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.

ಸಂಸದ ಪಿ.ಸಿ.ಮೋಹನ್‌, ಶಾಸಕ­ರಾದ ಗೋವಿಂದ ಕಾರಜೋಳ, ಎಲ್‌.ಎ.­ರವಿಸುಬ್ರಹ್ಮಣ್ಯ, ವಿಧಾನ ಪರಿಷತ್‌ ಸದಸ್ಯೆ ತಾರಾ, ಬಿಜೆಪಿ ನಗರ ಘಟಕದ ಅಧ್ಯಕ್ಷ ಸುಬ್ಬಣ್ಣ, ನಿರ್ಮಾಪಕಿ ಶಿಲ್ಪಾ ಗಣೇಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.