ADVERTISEMENT

ಕಟ್ಟಾಗೆ ಶಸ್ತ್ರಚಿಕಿತ್ಸೆ: ಷರತ್ತಿನ ಅನುಮತಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2011, 19:30 IST
Last Updated 9 ಸೆಪ್ಟೆಂಬರ್ 2011, 19:30 IST

ಬೆಂಗಳೂರು:ಕೆಐಎಡಿಬಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಕತ್ತಿನ ನರದ ಶಸ್ತ್ರಚಿಕಿತ್ಸೆ ನಡೆಸಲು ಅನುಮತಿ ನೀಡಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಆರೋಪಿಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ನಿರಂತರವಾಗಿ ನ್ಯಾಯಾಲಯಕ್ಕೆ ನೀಡುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಮತ್ತು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೆ ಆದೇಶಿಸಿದೆ.

ಆಗಸ್ಟ್ 8ರಿಂದ ನ್ಯಾಯಾಂಗ ಬಂಧನದಲ್ಲಿರುವ ಕಟ್ಟಾ, ಕೆಲ ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಪಿಗೆ ಕತ್ತು ನೋವಿನ ಸಮಸ್ಯೆ ಇರುವ ಕಾರಣದಿಂದ ಕತ್ತಿನ ನರದ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಶಿಫಾರಸು ಮಾಡಿದ್ದರು.

ಶಸ್ತ್ರಚಿಕಿತ್ಸೆಗೆ ಅನುಮತಿ ಕೋರಿ ಕಾರಾಗೃಹದ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ವೈದ್ಯರ ಶಿಫಾರಸಿನಲ್ಲಿ ಸಮರ್ಪಕ ಮಾಹಿತಿ ಇರದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಸ್ಥಾನಿಕ ವೈದ್ಯಕೀಯ ಅಧಿಕಾರಿ ಡಾ.ಕಾಂತರಾಜ್ ಅವರನ್ನು ನ್ಯಾಯಾಲಯಕ್ಕೆ ಕರೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಪೂರ್ಣ ವಿವರ ಪಡೆದರು.

ಕಟ್ಟಾ ಆರೋಗ್ಯ ಸ್ಥಿತಿ ಮತ್ತು ಶಸ್ತ್ರಚಿಕಿತ್ಸೆ ಅಗತ್ಯ ಕುರಿತು ವೈದ್ಯರು ಸಲ್ಲಿಸಿದ್ದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು, ಶಸ್ತ್ರಚಿಕಿತ್ಸೆಗೆ ಅನುಮತಿ ನೀಡಿ ಆದೇಶ ಹೊರಡಿಸಿದರು.

ಮಾಹಿತಿಗೆ ಸೂಚನೆ: ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗೆ ಮುಂದಿನ ದಿನಗಳಲ್ಲಿ ನೀಡುವ ಚಿಕಿತ್ಸೆಯ ಎಲ್ಲ ವಿವರಗಳನ್ನೂ ನ್ಯಾಯಾಲಯದ ಮುಂದೆ ಮಂಡಿಸಬೇಕು ಎಂದು ವೈದ್ಯರಿಗೆ ನ್ಯಾಯಾಧೀಶರು ತಾಕೀತು ಮಾಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.