ADVERTISEMENT

ಕಡಿಮೆ ಬೆಲೆಗೆ ನಿವೇಶನ ಆಮಿಷ...

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ಬೆಂಗಳೂರು: ಸರ್ಕಾರದ ಆಶ್ರಯ ಯೋಜನೆಯಡಿ ಮಂಜೂರಾದ ನಿವೇಶನಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಅಮೃತಹಳ್ಳಿಯ ವರದರಾಜಲೇಔಟ್‌ನ ನರೇಶ್‌ಭಟ್ (51) ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ನರೇಶ್‌ಭಟ್ ನಗರದ ವಿವಿಧೆಡೆ ಬಡ ಜನರಿಗೆ ಆಶ್ರಯ ಯೋಜನೆಯಡಿ ಮಂಜೂರಾಗಿದ್ದ ನಿವೇಶನಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿದ್ದ. ಆ ದಾಖಲೆ ಪತ್ರಗಳಲ್ಲಿ ನಮೂದಿಸಿದ್ದ ನಿವೇಶನಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ಹಣ ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆತ ಬೆಂಗಳೂರು ಉತ್ತರ ತಾಲ್ಲೂಕಿನ ಕಾಳತಮ್ಮನಹಳ್ಳಿ, ಯಲಹಂಕ ಸಮೀಪದ ಶ್ರೀನಿವಾಸಪುರ ಮತ್ತು ಲಕ್ಷ್ಮೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನಗಳ ದಾಖಲೆ ಪತ್ರಗಳನ್ನು ಸೃಷ್ಟಿಸಿದ್ದ. 100ಕ್ಕೂ ಹೆಚ್ಚು ಜನರಿಂದ ನಿವೇಶನವೊಂದಕ್ಕೆ 50 ಸಾವಿರದಿಂದ 1.25 ಲಕ್ಷ ರೂಪಾಯಿವರೆಗೆ ಹಣ ಪಡೆದು ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಾರ್ವಜನಿಕರಿಂದ ಪಡೆದಿದ್ದ ಹಣವನ್ನು ಜೂಜಾಡಿ ಕಳೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್. ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಕೆಂಚೇಗೌಡ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.