ADVERTISEMENT

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ ವಿಚಾರ ಸಂಕಿರಣದಲ್ಲಿ ಅಭಿಮತ

​ಪ್ರಜಾವಾಣಿ ವಾರ್ತೆ
Published 25 ಮೇ 2012, 19:30 IST
Last Updated 25 ಮೇ 2012, 19:30 IST
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ ವಿಚಾರ ಸಂಕಿರಣದಲ್ಲಿ ಅಭಿಮತ
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ ವಿಚಾರ ಸಂಕಿರಣದಲ್ಲಿ ಅಭಿಮತ   

ಬೆಂಗಳೂರು: `ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಸಮರ್ಪಕವಾಗಿದ್ದು, ಹಲವು ಗೊಂದಲಗಳಿಂದ ಕೂಡಿದೆ~ ಎಂದು ಶಿಕ್ಷಣ ಹಕ್ಕಿಗಾಗಿ ಅಖಿಲ ಭಾರತ ಸಮಿತಿಯ ಕಾರ್ಯದರ್ಶಿ ರಮೇಶ್ ಪಟ್ನಾಯಕ್ ಅಭಿಪ್ರಾಯಪಟ್ಟರು. 

ಕರ್ನಾಟಕ ಜನಶಕ್ತಿ ಸಂಘಟನೆಯ ಆಶ್ರಯದಲ್ಲಿ ನಗರದ ಎಚ್.ಆರ್.ಡಿ. ಸಭಾಂಗಣದಲ್ಲಿ ಶುಕ್ರವಾರ ನಡೆದ `ಶಿಕ್ಷಣ ಹಕ್ಕು ಕಾಯ್ದೆ ಜಾರಿಯ ಸಾಧಕ ಬಾಧಕಗಳು~ ಕುರಿತ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.
`ಕಾಯ್ದೆ ಮೂಲಕ ಶಿಕ್ಷಣದ ವ್ಯಾಪಾರೀಕರಣ ನಡೆಸಲು ಮುಂದಾಗಿದೆ. ಈ ಮೂಲಕ ಬಡವರು, ದಲಿತರು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ~ ಎಂದು ಅವರು ದೂರಿದರು.

`ಶಿಕ್ಷಣ ಹಕ್ಕು ಕಾಯ್ದೆ ಜಾರಿಯಿಂದ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಗಟ್ಟಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ವಾಸ್ತವದಲ್ಲಿ ಸರ್ಕಾರವು ಡೊನೇಷನ್ ಪಾರದರ್ಶಕವಾಗಿರುವಂತೆ ನೋಡಿಕೊಂಡಿದೆಯೇ ಹೊರತು ರದ್ದು ಮಾಡಿಲ್ಲ. ಶೇ 25 ಹಿಂದುಳಿದ ವಿದ್ಯಾರ್ಥಿಗಳ ಖರ್ಚನ್ನು ಸರ್ಕಾರವೇ ಭರಿಸುತ್ತಿರುವುದರ ಹಿಂದೆ ಖಾಸಗಿ ಶಾಲೆಗಳಿಗೆ ಹೆಚ್ಚು ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದೆ~ ಎಂದರು.

ಹಿರಿಯ ವಿಮರ್ಶಕ ಪ್ರೊ. ಜಿ. ರಾಮಕೃಷ್ಣ ಮಾತನಾಡಿ, `ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಕಾಯ್ದೆಯ ಹಿಂದೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ~ ಎಂದು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಎಚ್. ವಿ. ವಾಸು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಎನ್. ವೆಂಕಟೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.