ADVERTISEMENT

ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 19:43 IST
Last Updated 15 ಡಿಸೆಂಬರ್ 2012, 19:43 IST

ಬೆಂಗಳೂರು: ಕನಿಷ್ಠ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಕಿಯರ ಒಕ್ಕೂಟದ      (ಎಐಟಿಯುಸಿ) ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

`ರಾಜ್ಯದಾದ್ಯಂತ 80 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, 1.20 ಲಕ್ಷ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಕೇವಲ ನಾಲ್ಕು ಸಾವಿರ ರೂಪಾಯಿ ವೇತನ ನೀಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ ಸೇರಿದಂತೆ ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಸರ್ಕಾರ ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಹತ್ತು ಸಾವಿರ ರೂಪಾಯಿ ಕನಿಷ್ಠ ವೇತನ ಜಾರಿಗೊಳಿಸಬೇಕು' ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಒತ್ತಾಯಿಸಿದರು.

`ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ವೇತನ ಹೆಚ್ಚಿಸಲಾಗಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಹಿಂದೆ ಪ್ರಚಾರ ಪಡೆದುಕೊಂಡಿದ್ದವು. ಆದರೆ ಒಮ್ಮೆಯೂ ನಿಗದಿತ ಸಮಯಕ್ಕೆ ಗೌರವ ಧನ ನೀಡಿಲ್ಲ' ಎಂದು ಆಗ್ರಹಿಸಿದರು.
`ಬೇಸಿಗೆ ರಜೆಯ ಅವಧಿಯನ್ನು ಒಂದು ತಿಂಗಳಿಗೆ ಹೆಚ್ಚಿಸಬೇಕು. ವೇತನ ಸಹಿತ ರಜೆ ನೀಡಬೇಕು.

ಇಎಸ್‌ಐ, ಪಿಂಚಣಿ ಮೊತ್ತ ಹೆಚ್ಚಳ, ಜೀವವಿಮೆ ಸೌಲಭ್ಯಗಳನ್ನು ಒದಗಿಸಬೇಕು. ಹೆರಿಗೆ ಸಂದರ್ಭದಲ್ಲಿ ಆರು ತಿಂಗಳು ರಜೆ ನೀಡುವುದು ಸೇರಿದಂತೆ ನಮ್ಮ ಬೇಡಿಕೆಗಳಿಗಾಗಿ ಹಲವು ಬಾರಿ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರ್ಕಾರ ನಮ್ಮ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT