ADVERTISEMENT

ಕನಿಷ್ಠ ವೇತನ: ಗ್ರಾ.ಪಂ. ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2012, 19:25 IST
Last Updated 6 ಮಾರ್ಚ್ 2012, 19:25 IST

ಹೊಸಕೋಟೆ: ಕನಿಷ್ಠ ವೇತನ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಳಿಗೆ ಒತ್ತಾಯಿಸಿ ತಾಲ್ಲೂಕಿನ ಗ್ರಾಮ ಪಂಚಾಯತಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಿಐಟಿಯು ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ನೌಕರರು ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಗೋಪಾಲಕೃಷ್ಣ, `ಸರ್ಕಾರ ನೌಕರರ ಸೇವೆಯನ್ನು ಖಾಯಂಗೊಳಿಸಬೇಕು.

ನೌಕರರ ಕನಿಷ್ಠ ವೇತನ, ಜನಶ್ರೀ ವಿಮಾ ಯೋಜನೆ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರದ ಆದೇಶವಿದ್ದರೂ ತಾಲ್ಲೂಕಿನ ಗ್ರಾಮ ಪಂಚಾಯತಿಗಳು ಈ ಸರ್ಕಾರಿ ಆದೇಶಗಳನ್ನು ಜಾರಿಗೆ ತರುತ್ತಿಲ್ಲ~ ಎಂದು ಆರೋಪಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹಯ್ಯ ಮಾತನಾಡಿ, `ಗ್ರಾಮ ಪಂಚಾಯತಿಗಳಲ್ಲಿ ಸೇವೆಯಲಿರುವ ನೌಕರರಿಗೆ ಕೆಲಸದ ಭದ್ರತೆ ಇಲ್ಲದಂತಾಗಿದೆ. ಕೆಲವರಿಗೆ ಹಲವಾರು ತಿಂಗಳಿಂದ ವೇತನವೂ ಪಾವತಿ ಆಗಿಲ್ಲ. ಸರ್ಕಾರದ ಆದೇಶದಂತೆ ಸಿಬ್ಬಂದಿ ಖಾತೆ, ರಜೆ ಸೌಲಭ್ಯ, ಬಡ್ತಿ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳಿಗೆ ಸ್ಥಳೀಯ ಸಂಸ್ಥೆಗಳು ಆದ್ಯತೆ ನೀಡುತ್ತಿಲ್ಲ~ ಎಂದು ಆಗ್ರಹಿಸಿದರು.  ಸಂಘದ ಎಚ್.ಎನ್.ಮೋಹನ್‌ಬಾಬು, ಜಿ.ಶಂಕರಪ್ಪ ಮಾತನಾಡಿದರು. ಪ್ರತಿಭಟನೆಯ ನಂತರ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.