ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಓದಿ ಕಳೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ 1256 ವಿದ್ಯಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, `ಕನ್ನಡ ಮಾಧ್ಯಮ ಪ್ರಶಸ್ತಿ~ ನೀಡಿ ಗೌರವಿಸಲಿದೆ.
ಕಂದಾಯ ವಿಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ಆಯಾ ಭಾಗದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಶುಕ್ರವಾರ ಇಲ್ಲಿ ಹೇಳಿದರು.
ಮೊದಲ ಬಹುಮಾನ ರೂ 8,000, ದ್ವಿತೀಯ ಬಹುಮಾನ ರೂ 7,000 ಮತ್ತು ತೃತೀಯ ಬಹುಮಾನವಾಗಿ ರೂ 6,000, ಜತಗೆ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ, ಕೈಗಡಿಯಾರ, ಶಾಲಾ ಬ್ಯಾಗ್, ಕನ್ನಡ- ಕನ್ನಡ ನಿಘಂಟು, ಕನ್ನಡ- ಇಂಗ್ಲಿಷ್ ನಿಘಂಟು ಮತ್ತು ಪೆನ್ ನೀಡಲಾಗುವುದು ಎಂದರು.
ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗದ ವಿದ್ಯಾರ್ಥಿಗಳಿಗೆ ಇದೇ 28ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ, ಬೆಳಗಾವಿ ಮತ್ತು ಗುಲ್ಬರ್ಗ ವಿಭಾಗ ಮಟ್ಟದ ವಿದ್ಯಾರ್ಥಿಗಳಿಗೆ ನವೆಂಬರ್ 10ರಂದು ಕೂಡಲ ಸಂಗಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾರಾಷ್ಟ್ರದ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಅತಿ ಹೆಚ್ಚು ಅಂಕ ಪಡೆದ 312 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಇದೇ 14ರಂದು ಸೊಲ್ಲಾಪುರದಲ್ಲಿ ಸಮಾರಂಭ ಏರ್ಪಡಿಸಲಾಗುವುದು ಎಂದರು.
ಭಾಷಾ ಭಾವೈಕ್ಯ: ಪ್ರಾಧಿಕಾರದ ವತಿಯಿಂದ ಇದೇ 20ರಂದು ಪುಣೆ ಕನ್ನಡ ಸಂಘದ ಆಶ್ರಯದಲ್ಲಿ ಪುಣೆಯಲ್ಲಿ ಭಾಷಾ ಭಾವೈಕ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.