ADVERTISEMENT

ಕರಗಕ್ಕೆ ರೂ 78 ಲಕ್ಷ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ಬೆಂಗಳೂರು: ನಗರದ ಇತಿಹಾಸ ಪ್ರಸಿದ್ಧ ಕರಗ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು 78 ಲಕ್ಷ ರೂಪಾಯಿ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಪ್ರತಿ ವಾರ್ಡ್‌ಗೆ ತಲಾ 2 ಲಕ್ಷದಂತೆ ಒಟ್ಟು 4 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮೇಯರ್ ಪಿ. ಶಾರದಮ್ಮ ಬುಧವಾರ ಇಲ್ಲಿ ತಿಳಿಸಿದರು.

ಕರಗ ಉತ್ಸವ ಸಾಗುವ ಧರ್ಮರಾಯಸ್ವಾಮಿ ದೇವಸ್ಥಾನ ರಸ್ತೆ ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಹಳ ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕರಗ ಉತ್ಸವವನ್ನು ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಪಾಲಿಕೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ವರ್ಷದಿಂದ ವರ್ಷಕ್ಕೆ ಕರಗ ಉತ್ಸವ ಪ್ರವಾಸಿಗರನ್ನು  ಆಕರ್ಷಿಸುತ್ತಿರುವ ಹಿನ್ನೆಲೆಯಲ್ಲಿ ಲೋಪವುಂಟಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.

ಕರಗ ಉತ್ಸವದಂದು ಭಕ್ತಾದಿಗಳಿಗೆ ತೊಂದರೆಯುಂಟಾಗದಂತೆ ಕುಡಿಯುವ ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

`ಈ ವರ್ಷ ಕೆಂಪೇಗೌಡ ಜಯಂತಿ ಆಚರಣೆಗೆ 5 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಪ್ರತಿ ವಾರ್ಡ್‌ಗೆ ತಲಾ 2 ಲಕ್ಷದಂತೆ 198 ವಾರ್ಡ್‌ಗಳಿಗೆ     4 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಪಾಲಿಕೆಯ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಕೆಂಪೇಗೌಡ ದಿನಾಚರಣೆಗೆ ಸುಮಾರು ಒಂದು ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ~ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ ತಿಳಿಸಿದರು.

 `ಪ್ರತಿ ವರ್ಷದಂತೆ ಕರಗ ಉತ್ಸವಕ್ಕೂ ಪಾಲಿಕೆ ಹೆಚ್ಚಿನ ನೆರವು ನೀಡುತ್ತಿದೆ. ಅದೇ ರೀತಿ ಈ ವರ್ಷವೂ ಉತ್ಸವಕ್ಕಾಗಿ 78 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ~ ಎಂದು ಅವರು ಸಮರ್ಥಿಸಿಕೊಂಡರು. ಉಪ ಮೇಯರ್ ಎಸ್. ಹರೀಶ್ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.