ADVERTISEMENT

ಕಸ ವಿಲೇವಾರಿ ಸ್ಥಳಕ್ಕೆ ಮೇಯರ್ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಮೇ 2012, 19:30 IST
Last Updated 25 ಮೇ 2012, 19:30 IST

ಬೆಂಗಳೂರು: ಹೈದರಾಬಾದ್ ಮೂಲದ `ರಾಮ್ಕಿ~ ಕಂಪೆನಿ ತ್ಯಾಜ್ಯದಿಂದ ಸುಮಾರು 10 ಮೆ.ವಾವಿದ್ಯುತ್ ಉತ್ಪಾದನಾ ಘಟಕ ಆರಂಭಿಸಲು ಉದ್ದೇಶಿಸಿರುವ ಯಲಹಂಕ ಬಳಿಯ ಮಾವಳ್ಳಿಪುರದ ಕಸ ವಿಲೇವಾರಿ ಸ್ಥಳಕ್ಕೆ ಶಾಸಕ ಎಸ್. ಆರ್. ವಿಶ್ವನಾಥ್, ಮೇಯರ್ ಡಿ. ವೆಂಕಟೇಶಮೂರ್ತಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ನಗರದಲ್ಲಿ ಸಂಗ್ರಹವಾಗುತ್ತಿರುವ ಕಸದ ಪೈಕಿ ಸುಮಾರು 600-700 ಟನ್‌ಗಳಷ್ಟು `ರಾಮ್ಕಿ~ ಕಂಪೆನಿಗೆ ಪೂರೈಸಲಾಗುತ್ತಿದೆ. 10 ಮೆಗಾವಾಟ್ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸಲು ಇನ್ನೂ 300-400 ಟನ್‌ಗಳಷ್ಟು ತ್ಯಾಜ್ಯ ಪೂರೈಸುವಂತೆ ಕಂಪೆನಿಯು ಪಾಲಿಕೆಯನ್ನು ಕೋರಿದೆ.

ಈ ಹಿನ್ನೆಲೆಯಲ್ಲಿ ಒಂದು ಸಾವಿರ ಟನ್‌ಗಳಷ್ಟು ತ್ಯಾಜ್ಯ ವಿಲೇವಾರಿ ಮಾಡಲು ಕಂಪೆನಿಗೆ ಸಾಮರ್ಥ್ಯವಿದೆಯೇ ಎಂಬುದನ್ನು ಪರಿಶೀಲಿಸಲು ಮೇಯರ್ ವೆಂಕಟೇಶಮೂರ್ತಿ ಅವರು ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ಹಾಗೂ ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಇದೇ 29ರಂದು ನಡೆಯಲಿರುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಸಂಬಂಧ ಪ್ರಸ್ತಾವ ಮಂಡಿಸಿ ಚರ್ಚೆ ಬಳಿಕ ಅನುಮೋದನೆ ಪಡೆಯಲು ಉದ್ದೇಶಿಸಲಾಗಿದೆ.ಮಾವಳ್ಳಿಪುರದಲ್ಲಿ `ರಾಮ್ಕಿ~ ಕಂಪೆನಿ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡುತ್ತಿರುವುದನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ತಂಡ ಪರಿಶೀಲಿಸಿತು.

ಸ್ಥಳೀಯರ ಆರೋಪ: ಈ ನಡುವೆ, ಸ್ಥಳದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ದ್ರವದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಕಲುಷಿತಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಕಂಪೆನಿಗೆ ಸೂಚಿಸುವಂತೆ ಸ್ಥಳೀಯರು ಆಗ್ರಹಿಸಿದರು.

ಈ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಲಾಗುವುದು. ಅಲ್ಲದೆ,  ಈ ಪ್ರದೇಶದಲ್ಲಿ ಆರೋಗ್ಯ ಶಿಬಿರ ನಡೆಸಲಾಗುವುದು ಎಂದು ಜನಪ್ರತಿನಿಧಿಗಳು ಭರವಸೆ ನೀಡಿದರು.ಉಪ ಮೇಯರ್ ಎಲ್. ಶ್ರೀನಿವಾಸ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎನ್. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.