ಬೆಂಗಳೂರು: ಹಂಗಾಮಿ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವೊ ಅವರನ್ನೇ ರಾಜ್ಯ ಸರ್ಕಾರ ಕಾಯಂ ಡಿಜಿ ಮತ್ತು ಐಜಿಪಿ ಆಗಿ ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ.
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯದಲ್ಲಿಯೂ ಪೊಲೀಸ್ ಸಿಬ್ಬಂದಿ ಮಂಡಳಿ ರಚಿಸಲಾಗಿದೆ. ಇದಕ್ಕೆ ಪೂರಕವಾಗಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಕೂಡ ಮಾಡಿರುವ ಕಾರಣ ಡಿಜಿ ಮತ್ತು ಐಜಿಪಿ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎನ್ನುವ ಅಧಿಕಾರ ಈಗ ರಾಜ್ಯ ಸರ್ಕಾರಕ್ಕೆ ಇದೆ.
ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕಾನೂನು ಸಚಿವ ಎಸ್.ಸುರೇಶಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ ಮತ್ತು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಉಮೇಶ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಅಶೋಕ ಅವರು, `ಹಂಗಾಮಿ ಡಿಜಿಪಿಗೆ ಹೆಚ್ಚಿನ ಅಧಿಕಾರ ಇಲ್ಲ. ಹೀಗಾಗಿ ಕಾಯಂ ಡಿಜಿಪಿ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಅತ್ಯಂತ ಹಿರಿಯ ಅಧಿಕಾರಿಯನ್ನು ಈ ಹುದ್ದೆಗೆ ನೇಮಕ ಮಾಡಿ, ಬಳಿಕ ಅದನ್ನು ಮುಖ್ಯಮಂತ್ರಿಯವರ ಅವಗಾಹನೆಗೆ ಕಳುಹಿಸಲಾಗುವುದು~ ಎಂದು ಹೇಳಿದರು.
ಪಚಾವೊ ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿ. ಹೀಗಾಗಿ ಅವರ ಹೆಸರನ್ನೇ ಡಿಜಿಪಿ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
 
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.