ಬೆಂಗಳೂರು: ಹನುಮಂತನಗರ ಬಳಿಯ ರಾಘವೇಂದ್ರ ಬ್ಲಾಕ್ ನಿವಾಸಿ ಭೀಮರಾಜ್ (32) ಎಂಬುವರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭೀಮರಾಜ್, ಕಾರು ಚಾಲಕರಾಗಿದ್ದರು. ಕನಕಪುರದ ಯುವತಿಯ ಜತೆ ಜೂ.28ಕ್ಕೆ ಅವರ ಮದುವೆ ನಿಶ್ಚಯವಾಗಿತ್ತು. ಕುಟುಂಬ ಸದಸ್ಯರೊಂದಿಗೆ ರಾತ್ರಿ ಊಟ ಮಾಡಿದ ನಂತರ ಅವರು ಪ್ರತ್ಯೇಕ ಕೊಠಡಿಗೆ ತೆರಳಿ ಅಲ್ಲಿಯೇ ನೇಣು ಹಾಕಿಕೊಂಡಿದ್ದಾರೆ ಎಂದು ಹನುಮಂತನಗರ ಪೊಲೀಸರು ತಿಳಿಸಿದ್ದಾರೆ.
ಅಪಘಾತ: ಸಾವು: ಹೊಸೂರು ರಸ್ತೆಯ ಗಾರ್ವೆಬಾವಿಪಾಳ್ಯ ಸಮೀಪ ಶುಕ್ರವಾರ ರಾತ್ರಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯ ವಯಸ್ಸು ಸುಮಾರು 40 ವರ್ಷ. ಆದರೆ, ಅವರ ಗುರುತು ಪತ್ತೆಯಾಗಿಲ್ಲ. ಆ ವ್ಯಕ್ತಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆ ಬಸ್ ಬ್ರಿಗೇಡ್ ರಸ್ತೆಯಿಂದ ಎಲೆಕ್ಟ್ರಾನಿಕ್ಸಿಟಿಗೆ ಹೋಗುತ್ತಿತ್ತು. ಬಸ್ ಚಾಲಕನನ್ನು ಬಂಧಿಸಿ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಡಿವಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.