ADVERTISEMENT

ಕುರುಪ್ಪನ್‌ ಲೆನಿನ್‌, ಸಂತ್ರಸ್ತೆ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 20:26 IST
Last Updated 5 ಮಾರ್ಚ್ 2018, 20:26 IST
ಕುರುಪ್ಪನ್‌ ಲೆನಿನ್‌, ಸಂತ್ರಸ್ತೆ ಅರ್ಜಿ ವಜಾ
ಕುರುಪ್ಪನ್‌ ಲೆನಿನ್‌, ಸಂತ್ರಸ್ತೆ ಅರ್ಜಿ ವಜಾ   

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರ ಸೆಷನ್ಸ್ ನಾಯ್ಯಾಲಯದ ಆದೇಶ ಪ್ರಶ್ನಿಸಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಹಾಗೂ ಅವರ ಐವರು ಶಿಷ್ಯರು ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ ಸಂತ್ರಸ್ತೆ ಹಾಗೂ ದೂರುದಾರರನ್ನು ಪ್ರತಿವಾದಿಗಳನ್ನಾಗಿ ಸೇರ್ಪಡೆ ಮಾಡಿಕೊಳ್ಳಲು ಹೈಕೋರ್ಟ್‌ ನಿರಾಕರಿಸಿದೆ.

ಈ ಕುರಿತಂತೆ ಸಂತ್ರಸ್ತೆ ಹಾಗೂ ದೂರುದಾರ ಕುರುಪ್ಪನ್‌ ಲೆನಿನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾ ಮಾಡಿದೆ.

‘ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸುತ್ತಿರುವ ಸರ್ಕಾರಿ ವಕೀಲರಿಗೆ ಸಂತ್ರಸ್ತೆ ಅಥವಾ ದೂರುದಾರರು ಸಹಾಯ ಮಾಡಬಹುದು. ಆದರೆ ಪ್ರಕರಣದಲ್ಲಿ ನೇರವಾಗಿ ವಾದ ಮಂಡಿಸಲು ಅವಕಾಶವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ಪ್ರಕರಣವೇನು?: ಭಕ್ತೆಯೊಬ್ಬರ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಹಾಗೂ ಅವರ ಐವರ ಶಿಷ್ಯರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ, ವಂಚನೆ, ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ, ಜೀವ ಬೆದರಿಕೆ ಮತ್ತು ಅಪರಾಧಿಕ ಒಳಸಂಚು ಆರೋಪ ಹೊರಿಸಲಾಗಿದೆ. ಈ ಸಂಬಂಧ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ.

ಈ ದೋಷಾರೋಪ ಪಟ್ಟಿ ಆಧರಿಸಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್, 2017ರ ಡಿಸೆಂಬರ್‌ನಲ್ಲಿ ರಾಮನಗರ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು. ವಿಚಾರಣೆ ನಡೆಸುತ್ತಿರುವ ಅಧೀನ ನ್ಯಾಯಾಲಯಕ್ಕೆ ನಿತ್ಯಾನಂದ ಸ್ವಾಮೀಜಿ ಹಾಗೂ ಅವರ ಶಿಷ್ಯರು, ‘ನಮ್ಮನ್ನು ಆರೋಪಗಳಿಂದ ಮುಕ್ತಗೊಳಿಸಬೇಕು’ ಎಂದು ಕೋರಿದ್ದರು. ಆದರೆ, ಸೆಷನ್ಸ್‌ ನ್ಯಾಯಾಲಯ ಈ ಅರ್ಜಿಯನ್ನು ತಿರಸ್ಕರಿಸಿದೆ. ಸೆಷನ್ಸ್‌ ನ್ಯಾಯಾಲಯದ ಈ ಆದೇಶವನ್ನು ನಿತ್ಯಾನಂದ ಸ್ವಾಮೀಜಿ ಮತ್ತು ಶಿಷ್ಯರಾದ ಶಿವವಲ್ಲಭನೇನಿ, ರಾಗಿಣಿ ವಲ್ಲಭನೇನಿ, ಧನಶೇಖರ ಮತ್ತು ಜಮುನಾ ರಾಣಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.