ADVERTISEMENT

ಕುಲಪತಿ ವಿರುದ್ಧ ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 19:30 IST
Last Updated 10 ಅಕ್ಟೋಬರ್ 2012, 19:30 IST

ಬೆಂಗಳೂರು: ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಲ್ಲಿ ವಿಫಲರಾಗಿರುವ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಪ್ರಭುದೇವ ಅವರನ್ನು ಕುಲಪತಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಅರಮನೆ ರಸ್ತೆಯ ಉನ್ನತ ಶಿಕ್ಷಣ ಪರಿಷತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ನಗರ ಕಾರ್ಯದರ್ಶಿ ರಘು ಪೂಜಾರ್ ಮಾತನಾಡಿ, `ಬೆಂಗಳೂರು ವಿವಿಯು ಏಷ್ಯಾದಲ್ಲೇ ಅತಿ ದೊಡ್ಡ ವಿಶ್ವವಿದ್ಯಾಲಯ ಎಂಬ ಖ್ಯಾತಿ ಪಡೆದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಿಯಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ವಿವಿಯು ಶೋಚನೀಯ ಸ್ಥಿತಿ ತಲುಪಿದೆ. ಈ ಸ್ಥಿತಿ ತಲುಪಲು ಕುಲಪತಿ ಪ್ರಭುದೇವ ಅವರ ಸರ್ವಾಧಿಕಾರಿ ಧೋರಣೆಯೇ ಕಾರಣ. ಹೀಗಾಗಿ ಅವರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು~ ಎಂದು ಒತ್ತಾಯಿಸಿದರು.

`ಪ್ರಭುದೇವ ಅವರು ಏಕಪಕ್ಷೀಯವಾಗಿ ತೆಗೆದುಕೊಂಡ ನಿರ್ಣಯಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟವನ್ನು ಹಾಳು ಮಾಡಿದೆ. ಆಡಳಿತಾಧಿಕಾರಿಗಳ ನಡುವಿನ ಆಂತರಿಕ ಕಲಹದಿಂದ ವಿವಿಯ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೇಳುವವರು ಇಲ್ಲದಂತಾಗಿದೆ~ ಎಂದು ಆರೋಪಿಸಿದರು.ಪ್ರಭುದೇವ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಪ್ರತಿಭಟನಾಕಾರರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.