ADVERTISEMENT

ಕೃಷಿ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಜುಲೈ 2013, 19:59 IST
Last Updated 16 ಜುಲೈ 2013, 19:59 IST

ಬೆಂಗಳೂರು: ಕೇಂದ್ರ ಸರ್ಕಾರ ರೈತರಿಗೆ ಸಾಮಾಜಿಕ ಭದ್ರತೆ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಪಿ.ವಿ.ಲೋಕೇಶ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕೃಷಿ ಕಾರ್ಮಿಕರ ಸಂಘ ಮಂಗಳವಾರ ನಗರದ ಪುರಭವನದ ಮುಂದೆ ಏರ್ಪಡಿಸಿದ್ದ ರೈತರ ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷಗಳ ಆರ್ಥಿಕ ನೀತಿ ಒಂದೇ ಆಗಿದ್ದು, ಕಾರ್ಪೊರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದು ಆರೋಪಿಸಿದರು.

ಮುಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರೂ ನಗರಗಳ ಕಡೆ ಮುಖಮಾಡಿದರೆ ದೇಶ ಆಹಾರದ ಅಭಾವ ಎದುರಿಸಬೇಕಾಗುತ್ತದೆ. ಆದ್ದರಿಂದ, ಕೃಷಿ ಕಾರ್ಮಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ, ಸ್ವಾತಂತ್ರ ದೊರಕಿ 65ವರ್ಷಗಳಾದರು ಬೆವರನ್ನು ಧಾರೆ ಎರೆಯುವ ರೈತರಿಗೆ ಸಾಮಾಜಿಕ ನ್ಯಾಯ ದೊರಕಿಲ್ಲ ಎಂದರು.

ಪ್ರಸ್ತುತ ಕಟ್ಟಡ ಕಾರ್ಮಿಕರಿಗೆ ದೊರಕುತ್ತಿರುವ ಸೌಲಭ್ಯಗಳು ಕೃಷಿ ಕಾರ್ಮಿಕರಿಗೂ ಸಿಗಬೇಕು. ಅದಕ್ಕಾಗಿ ಕೃಷಿ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಯಾಗಬೇಕು ಎಂದು  ಸರ್ಕಾರವನ್ನು ಒತ್ತಾಯಿಸಿದರು.

ರೈಲು ನಿಲ್ದಾಣದಿಂದ ಪುರಭವನದವರೆಗೆ  ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಐವೈಎಫ್ ರಾಜ್ಯ ಕಾರ್ಯದರ್ಶಿ ಮೋನಪ್ಪ, ಎಐಎಸ್‌ಎಫ್ ರಾಜ್ಯ ಕಾರ್ಯದರ್ಶಿ ರಾಜೇಂದ್ರ ರಾಜ್ವಾಳ, ಬಿಕೆಎಂಯು ರಾಜ್ಯ ಸಂಚಾಲಕ ಡಾ.ಕೆ.ಎಸ್. ಜನಾರ್ಧನ, ನಿಂಗಪ್ಪ ಸಂಡೂರು, ಎ.ವಿ.ವೆಂಕಟರಾಮು, ಪಾಲವನಹಳ್ಳಿ ಪ್ರಸನ್ನಕುಮಾರ ಹಾಗೂ ಕೃಷಿ ಕಾರ್ಮಿಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.