ADVERTISEMENT

ಕೆಪಿಎಸ್‌ಸಿ ಸಂದರ್ಶನ ರದ್ದತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜೂನ್ 2013, 19:52 IST
Last Updated 7 ಜೂನ್ 2013, 19:52 IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆಯುವ ನೇಮಕಾತಿಗಳಲ್ಲಿ ಅಕ್ರಮ ತಡೆಯಲು ಸಂದರ್ಶನವನ್ನೇ ರದ್ದು ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ನಡೆಸಿರುವ ಸಂದರ್ಶನ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಪ್ರಕರಣ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿಯವರು ನಿರ್ಧರಿಸಿರುವುದು ಸ್ವಾಗತಾರ್ಹ' ಎಂದರು.

ಸಂದರ್ಶನ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅಂಕ ನೀಡುವ ಅಧಿಕಾರವನ್ನು ಆಯೋಗದ ಸದಸ್ಯರು ಹೊಂದಿದ್ದಾರೆ. ಈ ಅಧಿಕಾರವೇ ಭ್ರಷ್ಟಾಚಾರಕ್ಕೆ ಮೂಲವಾಗಿದೆ. ಸಂದರ್ಶನದಲ್ಲಿ ಅಂಕ ನೀಡುವ ಅಧಿಕಾರವನ್ನು ತೆಗೆದುಹಾಕಿದರೆ ಭ್ರಷ್ಟಾಚಾರಕ್ಕೆ ಅವಕಾಶವೇ ಇರುವುದಿಲ್ಲ. ರಾಜ್ಯ ಸರ್ಕಾರ ಈ ಕುರಿತು ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪರಿಶೀಲನೆಗೆ ಮನವಿ: ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಪರಿಶೀಲನೆ ನಡೆಸದೇ 21 ಖಾಸಗಿ ವಿಶ್ವವಿದ್ಯಾಲಯಗಳ ಆರಂಭಕ್ಕೆ ಅನುಮತಿ ನೀಡಿದೆ. ಈ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿದೆ ಎಂಬ ದೂರುಗಳಿವೆ. ಈಗಿನ ಸರ್ಕಾರ ಉನ್ನತಮಟ್ಟದ ಸಮಿತಿಯನ್ನು ನೇಮಿಸಿ ಖಾಸಗಿ ವಿಶ್ವವಿದ್ಯಾಲಯಗಳ ಅಗತ್ಯ ಕುರಿತು ಪರಿಶೀಲನೆ ನಡೆಸಬೇಕು. ಅರ್ಹ ಸಂಸ್ಥೆಗಳಿಗೆ ಮಾತ್ರ ಅನುಮತಿ ನೀಡಿ, ಉಳಿದ ಸಂಸ್ಥೆಗಳಿಗೆ ನೀಡಿರುವ ಅನುಮತಿಯನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದರು.

ಗುಟ್ಕಾ ನಿಷೇಧ ಕುರಿತು ಪ್ರತಿಕ್ರಿಯಿಸಿದ ಅವರು, `ಈ ವಿಷಯದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನ ಆದೇಶ ಪಾಲನೆ ಮಾಡಿದೆ. ಬಿಜೆಪಿ ಮುಖಂಡರು ಅಡಿಕೆ ಬೆಳೆಗಾರರನ್ನು ಓಲೈಸುವ ಉದ್ದೇಶದಿಂದ ಗುಟ್ಕಾ ನಿಷೇಧವನ್ನೂ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದರು.

ಅಗ್ಗದ ದರದ ಮದ್ಯ ಉತ್ಪಾದನೆ ಮತ್ತು ಮಾರಾಟ ಕುರಿತ ಚಿಂತನೆ ಬಗ್ಗೆ ಪ್ರಶ್ನಿಸಿದಾಗ, `ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಆಗಲಿ. ಮುಖ್ಯಮಂತ್ರಿಯವರೂ ಇದೇ ಇಂಗಿತ ವ್ಯಕ್ತಪಡಿಸಿದ್ದಾರಲ್ಲಾ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.