ADVERTISEMENT

ಕೆಪಿಎಸ್‌ಸಿ: 2011ರ ತಾತ್ಕಾಲಿಕ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 19:30 IST
Last Updated 5 ಮಾರ್ಚ್ 2014, 19:30 IST

ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿ­ಗಳ ನೇಮಕಾತಿ ತಾತ್ಕಾಲಿಕ ಪಟ್ಟಿ­ಯನ್ನು ಕರ್ನಾಟಕ ಲೋಕಸೇವಾ ಆಯೋಗ ಬುಧವಾರ ಸಂಜೆ ಪ್ರಕಟಿಸಿದೆ.

ಈ ಪಟ್ಟಿಯ ಬಗ್ಗೆ ಆಕ್ಷೇಪಗಳು ಇದ್ದರೆ 15 ದಿನಗಳಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಗಳನ್ನು ಪರಿ­ಗಣಿಸ­­ಲಾ­ಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ­ದಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಹಾಗೂ ಹೈಕೋರ್ಟ್‌­ಗಳಲ್ಲಿ ಕೆಲವು ಪ್ರಕರಣಗಳ ವಿಚಾರಣೆ ನಡೆ­ಯುತ್ತಿದ್ದು ಈ ಪಟ್ಟಿ ಕೋರ್ಟ್‌ಗಳು ನೀಡುವ ಆದೇಶಕ್ಕೆ ಬದ್ಧವಾಗಿರುತ್ತದೆ ಎಂದೂ ಸ್ಪಷ್ಟನೆ ನೀಡಿದೆ.

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದರು.

ನೇಮಕಾತಿ ಪ್ರಕ್ರಿ­ಯೆ­­ಯಲ್ಲಿ ಅಕ್ರಮಗಳು ನಡೆದಿವೆ ಎಂದು ಹೇಳಿರುವ ಸಿಐಡಿ ಪೊಲೀಸರು ಆಯೋಗದ ಮಾಜಿ ಅಧ್ಯಕ್ಷ ಗೋನಾಳ ಭೀಮಪ್ಪ, ಸದಸ್ಯೆ ಡಾ.­ಮಂಗಳಾ ಶ್ರೀಧರ್‌ ಮತ್ತು ಆಯೋಗದ ಕೆಲವು ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ಅನುಮತಿ ಕೋರಿದ್ದರು. ಮಂಗಳಾ ಶ್ರೀಧರ್‌ ಅವರನ್ನು ಅಮಾನತುಗೊಳಿಸಲು ರಾಜ್ಯ­ಪಾಲರು ಶಿಫಾರಸು ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.