ADVERTISEMENT

ಕೆಪಿಸಿಸಿ: ಕ್ರೈಸ್ತ ಮುಖಂಡರ ಸಭೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2011, 19:45 IST
Last Updated 1 ಅಕ್ಟೋಬರ್ 2011, 19:45 IST

ಬೆಂಗಳೂರು: ಕಾರ್ಯಕರ್ತರಿಗೆ ಪಕ್ಷದ ತತ್ವ-ಸಿದ್ಧಾಂತಗಳ ಕುರಿತು ಪಾಠ ಹೇಳುವ `ಚಿಂತನ ಮಂಥನ~ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ ಕೆಪಿಸಿಸಿ, ಕ್ರೈಸ್ತ ಸಮುದಾಯಕ್ಕೆ ಸೇರಿದ ಪಕ್ಷದ ಮುಖಂಡರ ಸಭೆಯನ್ನು ಶನಿವಾರ ನಡೆಸಿತು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಪಕ್ಷದ ಇಲ್ಲಿನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್, ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ, ಮಾಜಿ ಸಚಿವ ಟಿ. ಜಾನ್ ಇತರರು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಪರಮೇಶ್ವರ್, `ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ನಡೆದ ದಾಳಿಯ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಬಿ. ಸೋಮಶೇಖರ್ ನೇತೃತ್ವದ ಆಯೋಗ ತನ್ನ ವರದಿ ಸಲ್ಲಿಸಿ 10 ತಿಂಗಳು ಕಳೆದಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ಚರ್ಚ್‌ಗಳ ಮೇಲಿನ ದಾಳಿ ಪ್ರಕರಣಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ದಾಖಲು ಮಾಡಿದ್ದ ಪ್ರಕರಣಗಳನ್ನು  ಹಿಂಪಡೆಯಬೇಕು ಎಂದು ಮನವಿ ಮಾಡಲಾಗಿತ್ತು. ಅದು ಕೂಡ ಜಾರಿಯಾಗಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವು ಮುಖಂಡರು ಅತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.