ಬೆಂಗಳೂರು: ನಗರದ ದಾಸರಹಳ್ಳಿ ಕೆರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣಗೊಂಡಿದ್ದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಚಾಲನೆ ನೀಡಿದರು. ಆ ಮೂಲಕ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆದಿದೆ.
‘ದಾಸರಹಳ್ಳಿಕೆರೆಯು 27.23 ಎಕರೆ ಪ್ರದೇಶದಷ್ಟು ವಿಸ್ತಾರವಾಗಿದೆ. ದಾಸರಹಳ್ಳಿ ಸರ್ವೇ ನಂ 24 ಹಾಗೂ ಚೊಕ್ಕಸಂದ್ರ ಸರ್ವೇ ನಂ 5ರಲ್ಲಿ ಕೆರೆ ಪ್ರದೇಶವಿದೆ. ಆದರೆ 4.19 ಎಕರೆಯಷ್ಟು ಕೆರೆ ಪ್ರದೇಶ ಒತ್ತುವರಿಯಾಗಿತ್ತು’ ಎಂದು ಪಾಲಿಕೆ ಯೋಜನೆ-2 (ಕೆರೆಗಳು) ವಿಭಾಗದ ಮುಖ್ಯ ಎಂಜಿನಿಯರ್ ಬಿ.ವಿ. ಸತೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಕೆರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು 23 ವಾಣಿಜ್ಯ ಕಟ್ಟಡ ಹಾಗೂ ಮನೆಗಳು ನಿರ್ಮಾಣಗೊಂಡಿದ್ದವು. ಈ ಸಂಬಂಧ 26 ಮಂದಿ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಮಂಗಳವಾರ ಕಾರ್ಯಾಚರಣೆ ಆರಂಭಿಸಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದರು.
‘ಬುಧವಾರವೂ ಕಾರ್ಯಾಚರಣೆ ಮುಂದುವರೆಯಲಿದೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳ ಒತ್ತುವರಿ ತೆರವುಗೊಳಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.