ADVERTISEMENT

ಕೈದಿ ಗುಂಪುಗಳ ನಡುವೆ ಮಾರಾಮಾರಿ: ಗಾಯ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2011, 6:25 IST
Last Updated 1 ಫೆಬ್ರುವರಿ 2011, 6:25 IST

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ರಾತ್ರಿ ಕೈದಿ ಗುಂಪುಗಳ ನಡುವೆ ಮಾರಾಮಾರಿ ನಡೆದು ಮೂರಕ್ಕೂ ಹೆಚ್ಚು ಕೈದಿಗಳು ಗಾಯಗೊಂಡಿದ್ದಾರೆ.

ರೌಡಿಗಳಾದ ಕವಳ ಮತ್ತು ಲೋಗ ಎಂಬಾತನ ಸಹಚರರ ನಡುವೆ ಕ್ಷುಲ್ಲಕ ಕಾರಣಕ್ಕೆ ರಾತ್ರಿ 7 ಗಂಟೆ ಸುಮಾರಿಗೆ ಮಾತಿನ ಚಕಮಕಿ ನಡೆಯಿತು. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉಭಯ ಗುಂಪಿನವರು ಪರಸ್ಪರರ ಮೇಲೆ ಹಲ್ಲೆ ನಡೆಸಿದರು ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಂತದಲ್ಲಿ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು. ಘಟನೆಯಲ್ಲಿ ಮೂರು ವಿಚಾರಣಾಧೀನ ಕೈದಿಗಳು ಗಾಯಗೊಂಡಿದ್ದು, ಅವರಿಗೆ ಕಾರಾಗೃಹದ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶ್ರೀರಾಮಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪುಷ್ಪಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಲೋಗ ಮತ್ತು ಆತನ ಸಹಚರರು ಆರೋಪಿಗಳಾಗಿದ್ದರು. ಲೋಗ ಹಾಗೂ ರೌಡಿ ಕವಳನ ನಡುವೆ ಮೊದಲಿನಿಂದಲೂ ದ್ವೇಷವಿತ್ತು. ಇದೇ ಕಾರಣದಿಂದ ಅವರ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.