ಬೆಂಗಳೂರು: `ಕ್ರೀಡಾಪಟುಗಳು ಸರ್ಕಾರ ನೀಡಿರುವ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು~ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಇಲ್ಲಿ ಸಲಹೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ದಸರಾ ಮತ್ತು ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
`ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಯುವಕರು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು~ ಎಂದು ಹೇಳಿದರು.
`ಕ್ರೀಡಾಪಟುಗಳು ಮುಖ್ಯವಾಗಿ ಶಿಸ್ತು ಹಾಗೂ ಸಮಯ ಪಾಲನೆಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಶಿಸ್ತು ರೂಢಿಸಿಕೊಳ್ಳದಿದ್ದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ~ ಎಂದರು.
`ಯುವಕರು ವಿದ್ಯಾಭ್ಯಾಸಕ್ಕೆ ಒತ್ತು ನೀಡುವಂತೆ ಕ್ರೀಡೆಗೂ ಆಧ್ಯತೆ ನೀಡಬೇಕು. ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಮತೋಲನ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ. ಉತ್ಸಾಹದಿಂದ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು~ ಎಂದು ಸಲಹೆ ನೀಡಿದರು.
`ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಕೇವಲ ಗೆಲುವನ್ನೇ ನಿರೀಕ್ಷಿಸಬಾರದು. ನಿರಂತರ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಕೀರ್ತಿ ಗಳಿಸಲು ಸಾಧ್ಯ. ಮೊದಲು ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಾನೂ ಕೂಡ ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ವಾಲಿಬಾಲ್ ಆಟದಲ್ಲಿ ಸ್ಪರ್ಧಿಸಿದ್ದೆ~ ಎಂದು ನೆನೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ನೂರಾರು ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಕ್ರೀಡಾಕೂಟಕ್ಕೆ ಮುನ್ನ ಕ್ರೀಡಾಪಟುಗಳು ಪಥ ಸಂಚಲನ ನಡೆಸಿ, ಪ್ರತಿಜ್ಞಾನ ವಿಧಿ ಸ್ವೀಕರಿಸಿದರು. ನಂತರ ಸಚಿವ ಬಚ್ಚೇಗೌಡ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಕೆ.ರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆಟ್ಟಸ್ವಾಮಿ, ದಸರಾ ಕ್ರೀಡಾಕೂಟ ಸಮಿತಿ ಸದಸ್ಯ ಕಾರ್ಯದರ್ಶಿ ಟಿ.ಕೆ.ಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.