ADVERTISEMENT

‘ಗುತ್ತಿಗೆ ಪೌರಕಾರ್ಮಿಕರ ಕಾಯಂ’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 19:37 IST
Last Updated 21 ಮಾರ್ಚ್ 2018, 19:37 IST

ಬೆಂಗಳೂರು: ‘ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರ ಕಾರ್ಮಿಕರನ್ನು ಕಾಯಂ ಮಾಡಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ಪುರಭವನದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಏರ್ಪಡಿಸಿದ್ದ ಪೌರ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ನಗರದಲ್ಲಿ 20,000 ಪೌರ ಕಾರ್ಮಿಕರಿದ್ದು, ಅವರಲ್ಲಿ ಬಹುತೇಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಸಮಸ್ಯೆ ಹೆಚ್ಚಲು ರಾಜ್ಯ ಸರ್ಕಾರವೇ ಕಾರಣ’ ಎಂದು ಆರೋಪಿಸಿದರು.

‘ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರ ವೇತನ ಹೆಚ್ಚಳ ಮಾಡಿದ್ದೆ. ಮುಂದೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ನಿಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು’ ಎಂದರು.

ADVERTISEMENT

‘ಯಾವುದೇ ಕೆಲಸ ಮೇಲು ಅಥವಾ ಕೀಳಲ್ಲ. ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ದೊಡ್ಡದು. ತಮ್ಮ ಆರೋಗ್ಯ ಲೆಕ್ಕಿಸದೆ ಶುಚಿತ್ವದಲ್ಲಿ ಕಾರ್ಮಿಕರು ತೊಡಗಿಸಿಕೊಂಡಿದ್ದಾರೆ. ಅವರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಜವಾಬ್ದಾರಿ’ ಎಂದೂ ಹೇಳಿದರು.

ಬಿಜೆಪಿ ಮುಖಂಡ ಚಿ.ನಾ.ರಾಮೂ ಮಾತನಾಡಿ, ‘ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪೌರ ಕಾರ್ಮಿಕರ ಮುಖಂಡರೊಬ್ಬರಿಗೆ ಟಿಕೆಟ್ ನೀಡಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.