ADVERTISEMENT

ಗುರುತಿನ ಚೀಟಿಗಳು, ನಗದು ಜಪ್ತಿ

​ಪ್ರಜಾವಾಣಿ ವಾರ್ತೆ
Published 11 ಮೇ 2018, 20:13 IST
Last Updated 11 ಮೇ 2018, 20:13 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿ ಎರಡು ಕಡೆಗಳಲ್ಲಿ ದಾಳಿ ಮಾಡಿದ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು, ₹33.98 ಲಕ್ಷ ನಗದು ಮತ್ತು 150ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ.

ಸರ್ವಜ್ಞನಗರ ವಿಧಾನಸಭಾ ವ್ಯಾಪ್ತಿಯ ಬಾಣಸವಾಡಿ ಬಳಿಯ ಎಂಆರ್‌ಕೆ ಟೆಂಟ್‌ಹೌಸ್‌ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ₹18.98 ಲಕ್ಷ ನಗದು, ಗುರುತಿನ ಚೀಟಿಗಳನ್ನು ಪತ್ತೆ ಹಚ್ಚಿದ್ದಾರೆ.

‘ರಾಧಾಕೃಷ್ಣ ಎಂಬುವರಿಗೆ ಸೇರಿದ್ದ ಟೆಂಟ್‌ಹೌಸ್‌ ಇದಾಗಿದ್ದು, ಬಿಜೆಪಿ ಅಭ್ಯರ್ಥಿ ಪರವಾಗಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಡಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹಣದ ಜತೆಗೆ ಮತದಾರರ ಚುನಾವಣಾ ಗುರುತಿನ ಚೀಟಿಗಳೂ ಸಿಕ್ಕಿವೆ. ಈ ಸಂಬಂಧ ಚುನಾವಣಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಬಾಣಸವಾಡಿ ಪೊಲೀಸರು ತಿಳಿಸಿದರು.

ADVERTISEMENT

ಇನ್ನೊಂದು ಪ್ರಕರಣದಲ್ಲಿ ಜ್ಞಾನಭಾರತಿ ಪೊಲೀಸರು, ಉಳ್ಳಾಲ ರಸ್ತೆಯಲ್ಲಿ ಅಜಯ್‌ ಎಂಬುವರಿಂದ ದಾಖಲೆ ಇಲ್ಲದ ₹15 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

ಚೆಕ್‌ಪೋಸ್ಟ್‌ ಬಳಿ ವಾಹನದಲ್ಲಿ ಬಂದಿದ್ದ ಆರೋಪಿ, ಪರಾರಿಯಾಗಲು ಯತ್ನಿಸಿದ್ದ. ಆತನನ್ನು ಬೆನ್ನಟ್ಟಿ ಹಿಡಿಯಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಆತನ ಬಳಿ ಇದ್ದ ಹಣ ಯಾರಿಗೆ ಸೇರಿದ್ದು ಎಂಬುದು ಗೊತ್ತಾಗಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.