ADVERTISEMENT

ಗೋವರ್ಧನಮೂರ್ತಿ ಖುದ್ದು ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2014, 19:30 IST
Last Updated 3 ಮಾರ್ಚ್ 2014, 19:30 IST

ಬೆಂಗಳೂರು: ಚಿತ್ರನಟ ವಿನೋದ್‌ ಕುಮಾರ್‌ ಅವರ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಗೋವರ್ಧನ­­ಮೂರ್ತಿ ಅವರಿಗೆ ಖುದ್ದು ಹಾಜರಾಗುವಂತೆ ಹೈಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾ­ಲಯದ ಕ್ರಮ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಾ.ಕೆ. ಭಕ್ತವತ್ಸಲ ಮತ್ತು ನ್ಯಾಯಮೂರ್ತಿ ಕೆ.ಎನ್‌. ಕೇಶವ ನಾರಾಯಣ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ.
ವಿನೋದ್‌ ಕುಮಾರ್‌ ಅವರನ್ನು 2008ರಲ್ಲಿ ಬೆಂಗಳೂರಿನ ಹೊರವಲಯದ ಬಾಗಲೂರಿನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಅಧೀನ ನ್ಯಾಯಾಲಯ ಗೋವರ್ಧನ­ಮೂರ್ತಿ ಸೇರಿದಂತೆ ಒಟ್ಟು ಏಳು ಜನರನ್ನು ಖುಲಾಸೆ­ಗೊಳಿಸಿ 2012ರ ಡಿಸೆಂಬರ್‌ನಲ್ಲಿ ಆದೇಶಿಸಿತ್ತು. ಮೇಲ್ಮನವಿ ವಿಚಾರಣೆಯನ್ನು ಮಾರ್ಚ್‌ 17ಕ್ಕೆ ಮುಂದೂಡಲಾಗಿದೆ.

ಜೆಒಸಿ: ಆಕ್ಷೇಪ ಸಲ್ಲಿಸಲು ಸೂಚನೆ
ಜೆಒಸಿ (ವೃತ್ತಿಪರ ಶಿಕ್ಷಣ ಕೋರ್ಸ್‌) ಬೋಧಿಸುತ್ತಿದ್ದ ಕಾಲೇಜುಗಳ ಬೋಧಕ ಸಿಬ್ಬಂದಿಯನ್ನು ದ್ವಿತೀಯ ದರ್ಜೆ ಗುಮಾಸ್ತರನ್ನಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಸೂಚನೆ ಪ್ರಶ್ನಿಸಿ ರಾಜ್ಯ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಇವರನ್ನು ನೇಮಕ ಮಾಡಿಕೊಳ್ಳದಿದ್ದರೆ ವೇತನಾನು­ದಾನ ತಡೆಹಿಡಿಯುವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
‘ನಾವು ಸರ್ಕಾರದಿಂದ ವೇತನಾನುದಾನ ಪಡೆಯು­ತ್ತಿ­ದ್ದೇವೆ ಎಂಬ ಕಾರಣಕ್ಕೆ, ಯಾರನ್ನು ನೇಮಕ ಮಾಡಿಕೊಳ್ಳಬೇಕು ಎಂಬ ವಿಚಾರವನ್ನು ಸರ್ಕಾರ ನಮ್ಮ ಮೇಲೆ ಹೇರುವಂತಿಲ್ಲ’ ಎಂದು ಅರ್ಜಿಯಲ್ಲಿ ದೂರ­ಲಾಗಿದೆ.

ಅರ್ಜಿಯ ವಿಚಾರಣೆಯನ್ನು  ನ್ಯಾಯ­ಮೂರ್ತಿ ಎ.ಎನ್‌. ವೇಣುಗೋಪಾಲ ಗೌಡ ಅವರು ಮುಂದೂಡಿದ್ದಾರೆ.

ಖುದ್ದು ಹಾಜರಿಗೆ ಸೂಚನೆ
ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಮೈದಾನದಲ್ಲಿ ಉರ್ದು ಮಾಧ್ಯಮ ಶಾಲೆ ತೆರೆಯಲು ಅವಕಾಶ ನೀಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಮಂಗಳವಾರ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್‌ ಸೋಮವಾರ ಸೂಚಿಸಿದೆ.

ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ವೈ. ನಾಗರಾಜ್‌ ಸಲ್ಲಿಸಿ­ರುವ ಅರ್ಜಿಯ ವಿಚಾರಣೆಯನ್ನು ನ್ಯಾಯ­ಮೂರ್ತಿ ಎ.ಎನ್‌. ವೇಣುಗೋಪಾಲ ಗೌಡ ಅವರು ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.