ADVERTISEMENT

ಗೋಹತ್ಯೆ ನಿಷೇಧ: ಮಸೂದೆ ತಿದ್ದುಪಡಿಗೆ ಸಿದ್ಧತೆ- ಸಿ.ಎಂ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆಗೆ ಸಣ್ಣ ತಿದ್ದುಪಡಿ ತರುವಂತೆ ರಾಷ್ಟ್ರಪತಿಯವರು ಸೂಚಿಸಿದ್ದು, ಅದರಂತೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.

`ನಾಗರಿಕ ಸೇವಾ ಖಾತರಿ ಕಾಯ್ದೆ~ (ಸಕಾಲ) ಅನುಷ್ಠಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕಾರಕ್ಕಾಗಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಕಳುಹಿಸಲಾಗಿತ್ತು. `ಜಾನುವಾರು~ ಎಂಬ ಪದದ ಅರ್ಥಕ್ಕೆ ಸಂಬಂಧಿಸಿದಂತೆ ಸಣ್ಣ ತಿದ್ದುಪಡಿಯೊಂದನ್ನು ಮಾಡುವಂತೆ ಸೂಚಿಸಿ ರಾಷ್ಟ್ರಪತಿಯವರು ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲಾಗುವುದು~ ಎಂದರು.

ಕನಕಪುರದಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, `ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖಾ ವರದಿ ಕೈಸೇರಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು~ ಎಂದು ತಿಳಿಸಿದರು.

ADVERTISEMENT

ಗೋಹತ್ಯೆ ನಿಷೇಧ ಮಸೂದೆ ವಾಪಸಾಗಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಎಸ್. ಸುರೇಶ್‌ಕುಮಾರ್, `ರಾಷ್ಟ್ರಪತಿಯವರು ಮಸೂದೆಯನ್ನು ವಾಪಸ್ ಕಳುಹಿಸಿದ ಬಳಿಕ `ಜಾನುವಾರು~ ಎಂಬ ಪದದ ಅರ್ಥ ಕುರಿತು ಸರ್ಕಾರ ವಿವರಣೆ ನೀಡಿದೆ. ಮಾರ್ಚ್ 22ರಂದೇ ಸ್ಪಷ್ಟನೆ ನೀಡಿದ್ದು, ಕೇಂದ್ರದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.