ADVERTISEMENT

ಚಾಲಕನಿಗೆ 13 ತಿಂಗಳ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2012, 19:30 IST
Last Updated 3 ಫೆಬ್ರುವರಿ 2012, 19:30 IST

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಮಹಂತಯ್ಯ ಎಸ್.ಹಿರೇಮಠ್ (27) ಎಂಬುವರಿಗೆ ನಗರದ ಐದನೇ ಎಸಿಎಂಎಂ ನ್ಯಾಯಾಲಯ 13 ತಿಂಗಳ ಜೈಲು ಶಿಕ್ಷೆ ಮತ್ತು 6,500 ರೂಪಾಯಿ ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.

ನಗರದ ಎನ್.ಆರ್.ಚೌಕದ ಬಳಿ 2010ರ ಡಿ.20ರಂದು ಈ ಅಪಘಾತ ಸಂಭವಿಸಿತ್ತು. ಮಹಂತಯ್ಯ, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಹಿರಿಯ ವ್ಯವಸ್ಥಾಪಕ ಎಚ್.ವೈ.ಮಹೇಶ್ (58) ಎಂಬುವರಿಗೆ ಹಿಂದಿನಿಂದ ವಾಹನ ಗುದ್ದಿಸಿದ್ದರು. ಕೆಳಗೆ ಬಿದ್ದ ಮಹೇಶ್ ಅವರ ಮೇಲೆ ಬಸ್‌ನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದರು.

ಹಲಸೂರುಗೇಟ್ ಸಂಚಾರ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಪ್ರಭಾಕರ ಬಾಯರಿ ಅವರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮಹಂತಯ್ಯ ಅವರನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರಭು ಎಸ್.ಹತ್ತಿಕಾಳ್ ಅವರು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಕೃಷ್ಣಮೂರ್ತಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.