ADVERTISEMENT

ಚಿದಂಬರಂ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಣೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಬೆಂಗಳೂರು: ಕೇಂದ್ರ ಗೃಹಸಚಿವ ಪಿ.ಚಿದಂಬರಂ ಅವರು 2ಜಿ ಹಗರಣದ ಪ್ರಮುಖ ಆರೋಪಿಯಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ವರ್ತೂರಿನ ಗಾಂಧಿ ವೃತ್ತದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ಹಗರಣದಲ್ಲಿ ಪ್ರಮುಖ ರೂವಾರಿ ಪಿ.ಚಿದಂಬರಂ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ಇವರೂ ಕೂಡ ಆಗಿನ ಕೇಂದ್ರ ಸಚಿವ ಎ.ರಾಜಾ ಅವರಂತೆಯೇ  ಆರೋಪಿಯಾಗಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಹಾಗೂ ಇಡೀ ಕೇಂದ್ರ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದ ಸರ್ಕಾರವನ್ನೇ ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಘಟನೆಯ ಕಾರ್ಯದರ್ಶಿ ನವೀನ್‌ಕುಮಾರ್ ಮಾತನಾಡಿ ಈ ಹಗರಣದ ಎಲ್ಲಾ ಆರೋಪಿಗಳು ಜೈಲು ಸೇರಬೇಕು. ಎ.ರಾಜಾ ಅವರನ್ನು ಬಂಧಿಸಿ ಚಿದಂಬರಂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಚಿದಂಬರಂ ಅವರಿಗೆ ಸಚಿವರಾಗಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಸಂಘಟನೆಯ ಸಹ ಕಾರ್ಯದರ್ಶಿ ಮೋಹನ್‌ಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿ, ಚಿದಂಬರಂ ಹಾಗೂ ಕೆಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.         
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.