ಕೃಷ್ಣರಾಜಪುರ: `ಮಹಿಳೆಯರ ಹಕ್ಕು ರಕ್ಷಣೆಗೆ ಒತ್ತಾಯಿಸಿ ಮತ್ತು ದೌರ್ಜನ್ಯಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನವಾದಿ ಮಹಿಳಾ ಸಂಘಟನೆ ಹೋರಾಟ ನಡೆಸುತ್ತಿದೆ' ಎಂದು ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ಎಸ್.ವಿಮಲಾ ಹೇಳಿದರು.
ಕೃಷ್ಣರಾಜಪುರದಲ್ಲಿ ಭಾನುವಾರ ಏರ್ಪಡಿಸಿದ್ದ ಜನವಾದಿ ಮಹಿಳಾ ಸಂಘಟನೆಯ 6ನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. `ಸಂವಿಧಾನದ ಹಕ್ಕು ಎಲ್ಲರಿಗೂ ಸಿಗಬೇಕು. ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗಬೇಕು. ಜಾತಿ, ಧರ್ಮದ ಹೆಸರಿನಲ್ಲಿ ಶೋಷಣೆಗೊಳಗಾದ ಮಹಿಳೆಯರನ್ನು ಸಮಾಜಮುಖಿಯನ್ನಾಗಿಸುವುದು ಸಂಘಟನೆಯ ಉದ್ದೇಶ' ಎಂದು ಅವರು ತಿಳಿಸಿದರು.
`ಸಂಘಟಿತ ಹೋರಾಟದಿಂದ ಮಾತ್ರ ಫಲ ಸಾಧ್ಯ. ಕಾರ್ಯಕರ್ತೆಯರು ಅಲ್ಲಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅತ್ಯಾಚಾರ, ವರದಕ್ಷಿಣೆ ಪಿಡುಗನ್ನು ಪರಿಣಾಮಕಾರಿಯಾಗಿ ಎದುರಿಸಲು ಶಕ್ತರಾಗಬೇಕು' ಎಂದು ಅವರು ಕರೆ ನೀಡಿದರು.
ರಾಜ್ಯ ಘಟಕದ ಅಧ್ಯಕ್ಷೆ ಗೌರಮ್ಮ ಮಾತನಾಡಿ, `ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಆದರೆ, ಯೋಜನೆಗಳ ಅನುಷ್ಠಾನ ಗೊಂದಲ ಗೂಡಾಗಿದೆ. ಹೀಗಾಗಿ ಕೆಳಸ್ತರದ ಮಹಿಳೆಯರಿಗೆ ಹಕ್ಕು ಒದಗಿಸುವುದು ಸಂಘಟನೆಯ ಉದ್ದೇಶ' ಎಂದರು. ಮೌಂಟ್ ಕಾರ್ವೆುಲ್ ಕಾಲೇಜಿನ ಪ್ರಾಂಶುಪಾಲರಾದ ಎಸ್ತರ್, ಸಾಮಾಜಿಕ ಕಾರ್ಯಕರ್ತೆ ಟಿ.ಡಿ.ಬಾನು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.