ADVERTISEMENT

ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ಬೆಂಗಳೂರು: ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿ ದೇಶದಲ್ಲಿ ಅಶಾಂತಿ ಸೃಷ್ಟಿಸಿದ ಆರ್‌ಎಸ್‌ಎಸ್ ಹಾಗೂ ಶ್ರೀರಾಮಸೇನೆ ಸಂಘಟನೆಯ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಆನಂದ್‌ರಾವ್ ವೃತ್ತ ಸಮೀಪದ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.

ಜೆಡಿಎಸ್ ನಗರ ಅಧ್ಯಕ್ಷ ಎಂ.ಎಸ್.ನಾರಾಯಣ್ ರಾವ್ ಮಾತನಾಡಿ `ಆರ್‌ಎಸ್‌ಎಸ್ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ನಿರಂತರವಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ.
ಆದರೆ ಅವರ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಸರ್ಕಾರವೇ ಈ ಕೃತ್ಯದ ಹಿಂದೆ ನಿಂತಂತೆ ಕಾಣುತ್ತಿದೆ. ಈಗಲಾದರು ಎಚ್ಚೆತ್ತುಕೊಂಡು ಈ ಕೃತ್ಯದ ಹಿಂದಿರುವವರನ್ನು ಪತ್ತೆ ಮಾಡಿ ಎಲ್ಲರಿಗೂ ಶಿಕ್ಷೆ ನೀಡಬೇಕು. ಇಲ್ಲವಾದರೆ ಮುಂದೆ ಇಂತಹ ಹಲವು ಕೋಮುವಾದಿ ಸಂಘಟನೆಗಳು ಹುಟ್ಟಲು ಸರ್ಕಾರವೇ ಹೊಣೆಯಾಗಬೇಕಾಗುತ್ತದೆ~ ಎಂದರು.

ಶಾಂತಿಯುತ ಜೀವನ ನಡೆಸುತ್ತಿದ್ದ ಜನರ ನಡುವೆ ದ್ವೇಷ ಹುಟ್ಟಿಸುವಂತೆ ಮಾಡಿರುವ ಇಂತಹ ಕೋಮುವಾದಿ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಆರ್‌ಎಸ್‌ಎಸ್, ಶ್ರೀರಾಮಸೇನೆ, ವಿಎಚ್‌ಪಿ ಹಾಗೂ ಬಿಜೆಪಿ ಕಾರ್ಯಕರ್ತರ ಪ್ರತಿಕೃತಿಗಳನ್ನು ನಿರ್ಮಿಸಿ ನೇಣಿಗೇರಿಸುವ ಮೂಲಕ ಅಣುಕು ಪ್ರದರ್ಶನ ಮಾಡಿದರು.

ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಧು ಬಂಗಾರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.