ADVERTISEMENT

ಟಿಎಂಸಿ ಜೊತೆ ಸಂಘರ್ಷ: ಕಾಂಗ್ರೆಸ್ ಅವನತಿಯ ಸಂಕೇತ

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ಬೆಂಗಳೂರು: ಯುಪಿಎ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಡುವಿನ ಸಂಘರ್ಷ ಕಾಂಗ್ರೆಸ್‌ನ ಅವನತಿಯ ಸಂಕೇತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಅನಂತಕುಮಾರ್ ಬಣ್ಣಿಸಿದರು.

ಇಲ್ಲಿನ ಭೈರಸಂದ್ರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಕಾಂಗ್ರೆಸ್ ಪಕ್ಷ ಬೆಲೆ ಏರಿಕೆ, ಭ್ರಷ್ಟಾಚಾರದ ಪರವಾಗಿ ಮತ್ತು ಬಲಿಷ್ಠ ಲೋಕಪಾಲ ಮಸೂದೆಯ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಈ ಕಾರಣಕ್ಕೆ ಟಿಎಂಸಿ, ಕಾಂಗ್ರೆಸ್‌ನಿಂದ ದೂರ ಸರಿಯುವ ಸೂಚನೆ ನೀಡಿದೆ~ ಎಂದು ಹೇಳಿದರು.

ಎನ್‌ಸಿಪಿ ಮುಖಂಡ ಶರದ್ ಪವಾರ್, ಡಿಎಂಕೆ ಮುಖಂಡ ಎಂ. ಕರುಣಾನಿಧಿ ಅವರೂ ಕಾಂಗ್ರೆಸ್ ಜೊತೆ ಮುನಿಸಿಕೊಂಡಿದ್ದಾರೆ. ಇವೆಲ್ಲದರ ಪರಿಣಾಮ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದರು.

ಗೋವಾ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಜನ ಬೆಂಬಲ ವ್ಯಕ್ತವಾಗಿದೆ. ಮಣಿಪುರದಲ್ಲೂ ಬಿಜೆಪಿ ನೆಲೆ ಕಂಡುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.