ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ 7) ಸಂಚರಿಸುವ ಟ್ಯಾಕ್ಸಿಗಳಿಂದ ಸುಂಕ ಸಂಗ್ರಹಿಸಬಾರದು ಎಂಬ ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ ಮತ್ತಿತರ ಸಂಘಟನೆಗಳ ಬೇಡಿಕೆಯನ್ನು ಪರಿಶೀಲನೆ ಮಾಡುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಭರವಸೆ ಸಿಕ್ಕಿದೆ.
ಈ ಹಿನ್ನೆಲೆಯಲ್ಲಿ ಸಂಘಟನೆಗಳು ನಡೆಸಲು ನಿರ್ಧರಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂದಕ್ಕೆ ಪಡೆದಿವೆ. ‘ಈ ಬಗ್ಗೆ ಏ.21ರಂದು ದೆಹಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಸಭೆ ನಡೆಯಲಿದೆ. ಸುಂಕ ವಸೂಲಿ ಪ್ರಸ್ತಾವವನ್ನು ಕೈಬಿಡುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಮನವಿ ಮಾಡುತ್ತೇವೆ’ ಎಂದು ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ನ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ.
‘ಸುಂಕ ವಸೂಲಿಗೆ ಸಂಬಂಧಿಸಿದಂತೆ ನಾವು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ದೆಹಲಿ ಮಟ್ಟದಲ್ಲಿಯೇ ತೀರ್ಮಾನ ಆಗಬೇಕು. ಸಂಘಟನೆಗಳ ಬೇಡಿಕೆಯನ್ನು ದೆಹಲಿ ಮಟ್ಟದ ಅಧಿಕಾರಿಗಳಿಗೆ ತಲುಪಿಸಲಾಗುತ್ತದೆ’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಚಾಲಕರ ಸಂಘ, ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಟ್ಯಾಕ್ಸಿಗಳಿಂದ ಸುಂಕ ವಸೂಲಿ ಮಾಡುವ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು. ಅಲ್ಲದೇ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.