ADVERTISEMENT

ಟ್ರಕ್‌ಗೆ ಡಿಕ್ಕಿ: ಮಿನಿಟೆಂಪೊ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 18 ಜುಲೈ 2013, 19:53 IST
Last Updated 18 ಜುಲೈ 2013, 19:53 IST

ಬೆಂಗಳೂರು:  ನಗರದ ಕೆಂಗೇರಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ.

ಮೈಸೂರು ರಸ್ತೆಯ ನೈಸ್ ರಸ್ತೆಯ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮಿನಿಟೆಂಪೊ ಚಾಲಕ ಶರತ್ (24) ಎಂಬುವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಕ್ಲೀನರ್ ಬಾಬಿ ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೊಮೆಟೋ ತುಂಬಿದ್ದ ಮಿನಿ ಟೆಂಪೊ ಕುಂಬಳಗೋಡು ಕಡೆಯಿಂದ ಕೆ.ಆರ್.ಮಾರುಕಟ್ಟೆ ಕಡೆಗೆ ಬರುತ್ತಿತ್ತು. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಮಿನಿ ಟೆಂಪೊ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕೆಂಗೇರಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಬೈಕ್ ಸವಾರ ಸಾವು:  ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳಗೆ ಬಿದ್ದ ಡೇನಿಯಲ್ (37) ಎಂಬವರು ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಮೀಪದ ಎಂ.ಎಸ್.ಪಾಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ.

ಸಂಬಂಧಿಕರೊಬ್ಬರ ಮನೆಯಲ್ಲಿ ಔತಣ ಕೂಟ ಮುಗಿಸಿಕೊಂಡು ವಿದ್ಯಾರಣ್ಯಪುರದ ಕಡೆಗೆ ಹೊರಟಿದ್ದ ಅವರು ರಾತ್ರಿ 10 ಗಂಟೆ ಸುಮಾರಿಗೆ ಎಂ.ಎಸ್. ಪಾಳ್ಯದ ಸಮೀಪ ಬರುತ್ತಿದ್ದಾಗ ಬೈಕ್‌ನಿಂದ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ.  ಅವರ ಹಿಂದೆಯೇ ಮತ್ತೊಂದು ಬೈಕ್‌ನಲ್ಲಿ ಬರುತ್ತಿದ್ದ ಅವರ ಪತ್ನಿ ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೆಬ್ಬಾಳ ಸಂಚಾರ ವಿಭಾಗದ ಪೊಲೀಸರು ಹೇಳಿದ್ದಾರೆ.

ಹಿಂಬದಿ ಸವಾರ ಸಾವು:  ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಕೆಂಚಪ್ಪ ಮೋಟಪ್ಪನವರ್ (27) ಎಂಬುವರು ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ.

ನಗರದ ಖಾಸಗಿ ಕಂಪೆನಿಯೊಂದರ ಉದ್ಯೋಗಿಗಳಾದ ರಾಜೇಶ್ (25) ಮತ್ತು ಕೆಂಚಪ್ಪ ರಾತ್ರಿ ಊಟ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆ ವೇಳೆ ರಾಜೇಶ್ ಬೈಕ್ ಚಾಲನೆ ಮಾಡುತ್ತಿದ್ದರು.

ರಾಜೇಶ್ ಅವರ ನಿಯಂತ್ರಣ ತಪ್ಪಿದಾಗ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ತಲೆಗೆ ತೀವ್ರ ಪೆಟ್ಟಾದ ಕೆಂಚಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.