ಬೆಂಗಳೂರು: ಶಾಂತಿನಗರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪಾತ್ರವಿರುವ ಬಗ್ಗೆ ಯಾವುದೇ ಸಾಕ್ಷ್ಯವಿಲ್ಲ ಎಂದು ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ತಿಳಿಸಿದರು.
ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿನೀಡಿ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ನಾನು ಸಮಗ್ರವಾಗಿ ಪರಿಶೀಲಿಸಿದ್ದೇನೆ. ಎಲ್ಲಿಯೂ ಶಿವಕುಮಾರ್ ಹೆಸರಿಲ್ಲ. ಅವರು ಪತ್ರ ವ್ಯವಹಾರ ನಡೆಸಿರುವುದಕ್ಕೂ ದಾಖಲೆಗಳಿಲ್ಲ. ಅವರ ವಿರುದ್ಧ ದೂರುಗಳಿರುವ ಮಾಹಿತಿಯೂ ಇಲ್ಲ’ ಎಂದರು.
ಜನವರಿಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮತ್ತು ಭೂ ಕಬಳಿಕೆ ವಿರೋಧಿ ವೇದಿಕೆ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರು, ‘ಶಾಂತಿನಗರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ 66 ಎಕರೆ ಜಮೀನು ಕಬಳಿಸಿದ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ’ ಎಂದು ಆರೋಪಿಸಿದ್ದರು. ಇಂಧನ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಹಕಾರ ಸಚಿವರ ಕಚೇರಿ ಎದುರು ಧರಣಿಯನ್ನೂ ನಡೆಸಿದ್ದರು.
ಈ ಕುರಿತು ಮಹದೇವ ಪ್ರಸಾದ್ ಅವರನ್ನು ಪ್ರಶ್ನಿಸಿದಾಗ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರಿಂದ ಅಭಿಪ್ರಾಯ ಪಡೆಯಲಾಗುವುದು. ಕಾನೂನು ತಜ್ಞರು ನೀಡುವ ಸಲಹೆ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದರು.
‘ಶಾಂತಿನಗರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಂಬಂಧಿಸಿದ ವ್ಯಾಜ್ಯಗಳು ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗಿದೆ. ಎಲ್ಲ ವ್ಯವಹಾರಗಳು 2003ರಿಂದ 2006ರ ಅವಧಿಯಲ್ಲಿ ನಡೆದಿವೆ. ಸಂಘದ ಷೇರುದಾರರು ಮತ್ತು ನಿವೇಶನ ಕೋರಿದವರು ದೂರು ನೀಡಿಲ್ಲ’ ಎಂದರು.
ಕಾಯ್ದೆಗೆ ತಿದ್ದುಪಡಿ: ಗೃಹ ನಿರ್ಮಾಣ ಸಹಕಾರ ಸಂಘಗಳು ತ್ವರಿತವಾಗಿ ಜಮೀನು ಖರೀದಿ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಸಹಕಾರ ಸಂಘಗಳ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂದರು.
ಈಗ ಜಾರಿಯಲ್ಲಿರುವ ಕಾಯ್ದೆಯ ಪ್ರಕಾರ ಗೃಹ ನಿರ್ಮಾಣ ಸಹಕಾರ ಸಂಘಗಳು ಒಂದು ಬಾರಿಗೆ 50 ಎಕರೆಗಿಂತ ಹೆಚ್ಚಿನ ಜಮೀನು ಖರೀದಿಸಲು ಅವಕಾಶವಿಲ್ಲ. ಅದನ್ನು ಹೆಚ್ಚಿಸುವ ಪ್ರಸ್ತಾವವಿದೆ. ಜಮೀನು ಖರೀದಿಗೆ ಒಪ್ಪಿಗೆ ನೀಡುವ ಪ್ರಕ್ರಿಯೆಯನ್ನೂ ಸರಳೀಕರಿಸಲಾಗುವುದು ಎಂದರು.
ಮತ್ತೊಂದು ನೋಟಿಸ್: ಹಣಕಾಸು ದುರ್ಬಳಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿರುವ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಪಿ.ನಾಗರಾಜ್ ಅವರಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.