ADVERTISEMENT

ಡಿವಿಎಸ್ ವಿರುದ್ಧ ಲೋಕಾಯುಕ್ತಕ್ಕೆ ಖಾಸಗಿ ದೂರು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 19:15 IST
Last Updated 3 ಅಕ್ಟೋಬರ್ 2012, 19:15 IST

ಬೆಂಗಳೂರು: ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಮತ್ತು ಇತರರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಖಾಸಗಿ ದೂರು ಸಲ್ಲಿಕೆಯಾಗಿದೆ. ದೂರಿನ ಕುರಿತು ಇದೇ 17ರಂದು ಆದೇಶ ನೀಡುವುದಾಗಿ ಹೇಳಿ, ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರು ವಿಚಾರಣೆಯನ್ನು ಮುಂದೂಡಿದರು.

ಗ್ರಾಮೀಣ ಗೃಹನಿರ್ಮಾಣ ಯೋಜನೆಯ ಅಡಿ ಕೇಂದ್ರ ಸರ್ಕಾರ, ಯಶವಂತಪುರ ಹೋಬಳಿಯ ಗಿಡದಕೊನೇನಹಳ್ಳಿಯ ಸರ್ವೆ ಸಂಖ್ಯೆ 38 ಮತ್ತು 39ರಲ್ಲಿ 54.14 ಎಕರೆ ಭೂಮಿಯನ್ನು 1972ರಲ್ಲಿ 910 ಜನರಿಗೆ ನೀಡಿತ್ತು. ಈ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಮುಂದಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 2003ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತು. ಅಂತಿಮ ಅಧಿಸೂಚನೆ ಹೊರಡಿಸುವ ಮುನ್ನ ಇದರಲ್ಲಿ 10 ಎಕರೆ ಪ್ರದೇಶವನ್ನು ಎರಡು ಶಿಕ್ಷಣ ಸಂಸ್ಥೆಗಳಿಗೆ ನೀಡಿತು.

ಈ ನಿರ್ಧಾರವನ್ನು ಜಮೀನನ್ನು ಮೊದಲು ಪಡೆದುಕೊಂಡಿದ್ದವರು, ಹೈಕೋರ್ಟ್‌ನಲ್ಲಿ ಪ್ರಶ್ನಿಸಿದರು. ಪ್ರಾಥಮಿಕ ಅಧಿಸೂಚನೆ ಸರಿ ಇಲ್ಲ ಎಂದು ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಹೇಳಿದೆ. ಇದನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿಹಿಡಿದಿದೆ ಎಂದು ದೂರುದಾರ ಸಿ.ಆರ್. ನಾಗರಾಜ ದೂರಿನಲ್ಲಿ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.