ಬೆಂಗಳೂರು: ನಗರದ ಐಟಿಪಿಎಲ್ನಲ್ಲಿ ಇರುವ ಸುಮಧುರ ಸ್ವರ್ಣ ಅಪಾರ್ಟ್ಮೆಂಟ್ನಲ್ಲಿ ಡೆಂಗೆ ರೋಗಲಕ್ಷಣ ಇರುವವರ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗೆ ಹರಡುವ ಭೀತಿ ಎದುರಾಗಿದೆ.
ಅತಿಯಾದ ಜ್ವರ ಹಾಗೂ ತಲೆನೋವಿನಿಂದ ನಿವಾಸಿಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಎರಡು ವಾರಗಳ ಹಿಂದೆಯಷ್ಟೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಈ ವಾರ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಅದರಲ್ಲಿ ಕೆಲವರಿಗೆ ಡೆಂಗೆ ಇರುವುದು ದೃಢಪಟ್ಟಿದೆ ಎಂದು ನಿವಾಸಿ ದೀಪಕ್ ಅಗರವಾಲ್ ತಿಳಿಸಿದರು.
ಅಪಾರ್ಟ್ಮೆಂಟ್ಗಳ ಮಾಲೀಕರು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡದೇ ಇರುವುದರಿಂದ ಅಲ್ಲಲ್ಲಿ ಸೊಳ್ಳೆಗಳು ಹರಡಿ ಡೆಂಗೆ ತರುತ್ತಿವೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಈಗಾಗಲೇ ನಿವಾಸಿಗಳು ಬಿಬಿಎಂಪಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. `ಕೆಲವು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ ಪಾಲಿಕೆ ಅಧಿಕಾರಿಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಲಾರ್ವಾ ಇರುವುದು ಪತ್ತೆಯಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆಯೂ ತಿಳಿ ಹೇಳಲಾಗಿದೆ' ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ಕಲ್ಪನಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.