ಬೆಂಗಳೂರು: ಸಾಫ್ಟ್ವೇರ್ ಎಂಜಿನಿಯರ್ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾವಣೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.
‘ತನಿಖೆಯನ್ನು ವಿಶೇಷ ತನಿಖಾ ದಳದಿಂದ (ಎಸ್ಐಟಿ) ಸಿಐಡಿಗೆ ವರ್ಗಾಯಿಸಲು ಅನುಮತಿ ನೀಡಬೇಕು’ ಎಂದು ಕೋರಿ ನಗರ ಪೊಲೀಸ್ ಕಮಿಷನರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಮಾನ್ಯ ಮಾಡಿದೆ.
ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ, ‘ಕ್ರಿಮಿನಲ್ ಪ್ರಕರಣಗಳ ತನಿಖೆಗಳಿಗಾಗಿಯೇ ಸಿಐಡಿ ರಚಿಸಲಾಗಿದೆ. ಹಾಗಾಗಿ ಅಜಿತಾಬ್ ಪ್ರಕರಣವನ್ನೂ ಸಿಐಡಿಗೆ ವಹಿಸಲು ನಗರ ಪೊಲೀಸರು ಕಮಿಷನರ್ ನಿರ್ಧರಿಸಿದ್ದಾರೆ. ಅಂತೆಯೇ ಮುಂಬರುವ ವಿಧಾನಸಭೆ ಚುನಾವಣೆಯ ಕಾರ್ಯ ನಿರ್ವಹಣೆಗೂ ಪೊಲೀಸರು ಬೇಕಾಗಿದ್ದಾರೆ. ಹೀಗಾಗಿ ಸಿಐಡಿಗೆ ಪ್ರಕರಣ ವರ್ಗಾಯಿಸಲು ಅನುಮತಿ ನೀಡಬೇಕು’ ಎಂದು ಕೋರಿದರು.
ಇದನ್ನು ಪುರಸ್ಕರಿಸಿದ ನ್ಯಾಯಪೀಠ ತನಿಖೆಯ ಪ್ರಗತಿಯನ್ನು ಮಾರ್ಚ್ 12ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶಿಸಿದೆ.
ಪ್ರಕರಣವೇನು?:
ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಜಿತಾಬ್ 2017ರ ಡಿಸೆಂಬರ್ 18ರ ಸಂಜೆ6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ತಂದೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸ್ ತನಿಖೆಯಲ್ಲಿ ಪ್ರಗತಿ ಕಾಣದ ಅವರು ಹೈಕೋರ್ಟ್ ಮಟ್ಟಿಲೇರಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.