ADVERTISEMENT

ತಾಲ್ಲೂಕಿನಲ್ಲಿ 10 ಅಂಬೇಡ್ಕರ್ ಭವನ ನಿರ್ಮಾಣ: ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 20:00 IST
Last Updated 21 ಡಿಸೆಂಬರ್ 2012, 20:00 IST

ಹೊಸಕೋಟೆ: ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಹಾಗು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಬದ್ಧವಾಗಿದ್ದು ಬಜೆಟ್‌ನಲ್ಲಿ ಸಾಕಷ್ಟು ಹಣ ಮೀಸಲಿಟ್ಟಿದೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.ತಾಲ್ಲೂಕಿನ ಮುಗಬಾಳ ಗ್ರಾಮದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನ ನೂರು ಗ್ರಾಮಗಳಲ್ಲಿನ ಹರಿಜನ ಕೇರಿಗಳಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾರ್ಯ ನಡೆದಿದೆ. ತಾಲ್ಲೂಕಿನಲ್ಲಿ 10 ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಾಗು ಹೊಸಕೋಟೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿನಿಲಯ ಕಟ್ಟಿಸಲು ಮಂಜೂರಾತಿ ದೊರಕಿದೆ ಎಂದು ಹೇಳಿದರು.

ಮುಗಬಾಳ ಗ್ರಾ.ಪಂ.ವ್ಯಾಪ್ತಿಯಲ್ಲಿ 1.75 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ನಡೆದಿದೆ ಎಂದು ತಿಳಿಸಿದರು.
ಮಾದಿಗ ದಂಡೋರದ ರಾಜ್ಯ ಘಟಕದ ಅಧ್ಯಕ್ಷ ಎಂ.ಶಂಕರಪ್ಪ ಮಾತನಾಡಿ ಮಾದಿಗರಿಗೆ ಮೀಸಲಾತಿಯಲ್ಲಿ ಅನ್ಯಾವಾಗಿದ್ದು ಶೇ.6 ರಷ್ಟು ಒಳಮೀಸಲಾತಿ ನೀಡುವಲ್ಲಿ ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಜಾರಿಗೊಳಿಸುವಲ್ಲಿ ಸಚಿವರು ಮುಂದಾಗುವಂತೆ ಮನವಿ ಮಾಡಿದರು.

ಪುರಸಭೆ ಮಾಜಿ ಅಧ್ಯಕ್ಷ ಎನ್.ನಾಗರಾಜ್, ಮುಖಂಡ ವಿ.ವಿಜಯಕುಮಾರ್ ಅವರು ಮಾತನಾಡಿದರು. ಆದಿ ಜಾಂಬವ ಸಂಸ್ಥಾನ ಮಠದ ಷಡಕ್ಷರ ಮುನಿ ದೇಶಿಕೇಂದ್ರ ಸ್ವಾಮಿ ಸಾನಿಧ್ಯ ವಹಿಸಿದ್ದರು. ತಾ.ಪಂ. ಅಧ್ಯಕ್ಷೆ ಪಿ.ರಾಣಿ, ಮುಖಂಡರಾದ ಟಿ.ಸೊಣ್ಣಪ್ಪ, ನಂಜೇಗೌಡ, ಬಿ.ಎಂ. ನಾರಾಯಣಸ್ವಾಮಿ, ಶ್ರೀನಿವಾಸ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.