ADVERTISEMENT

ತ್ಯಾಜ್ಯ ವಿಲೇವಾರಿ: ವರದಿ ಸಲ್ಲಿಕೆಗೆ ಮತ್ತಷ್ಟು ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 19:30 IST
Last Updated 11 ಅಕ್ಟೋಬರ್ 2017, 19:30 IST

ಬೆಂಗಳೂರು: ಮಾವಳ್ಳಿಪುರದಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ಜೈವಿಕ ಗಣಿಗಾರಿಕೆ ಮೂಲಕ ವಿಲೇವಾರಿ ಮಾಡಿ, ವರದಿ ಸಲ್ಲಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ( ಬಿಬಿಎಂಪಿ) ಹೈಕೋರ್ಟ್ ಮತ್ತಷ್ಟು ಕಾಲಾವಕಾಶ ನೀಡಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲು ಪಾಲಿಕೆಗೆ ನವೆಂಬರ್ 10ರವರೆಗೂ ಕಾಲಾವಕಾಶ ನೀಡಲಾಗಿದೆ. ಮಾವಳ್ಳಿಪುರ ಭೂಭರ್ತಿ ಘಟಕದಲ್ಲಿರುವ ಕಸ ವಿಲೇವಾರಿ ಮಾಡಿ ಈ ಸಂಬಂಧ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಕಳೆದ ಸೆ.4ರಂದು ಹೈಕೋರ್ಟ್ ಆದೇಶಿಸಿತ್ತು.

ADVERTISEMENT

ವಾರ್ಡ್ ಸಮಿತಿ: ಇದೇ ವೇಳೆ ವಾರ್ಡ್ ಸಮಿತಿ ರಚನೆ ಕುರಿತಂತೆ ಬಿಬಿಎಂಪಿ ವಕೀಲರು ನ್ಯಾಯಪೀಠಕ್ಕೆ ವಿವರಣೆ ನೀಡಿದರು. ‘ಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಕಾರಣಗಳಿಂದಾಗಿ ವಾರ್ಡ್ ಸಮಿತಿಗಳ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿ ಅದನ್ನು ಪಾಲಿಕೆ ಸಭೆಯ ಮುಂದಿಟ್ಟು ಅನುಮೋದನೆ ಪಡೆಯಲು ಸಾಧ್ಯವಾಗಿಲ್ಲ’ ಎಂದು ತಿಳಿಸಿದರು.

‘ಕೌನ್ಸಿಲ್ ಅನುಮೋದನೆ ಪಡೆದ ನಂತರ ವಾರ್ಡ್ ಸಮಿತಿ ಸದಸ್ಯರ ಅಂತಿಮ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.