ADVERTISEMENT

ದಾಖಲೆ ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 19:50 IST
Last Updated 4 ಫೆಬ್ರುವರಿ 2011, 19:50 IST

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಮಹೇಶಪ್ಪ ಅವರು ನಕಲಿ ದಾಖಲೆ ನೀಡುವ ಮೂಲಕ ನೇಮಕಗೊಂಡಿರುವ ಆರೋಪದ ಸತ್ಯಾಸತ್ಯತೆಗಳನ್ನು ಪರಿಶೀಲಿಸಬಯಸಿರುವ ಹೈಕೋರ್ಟ್ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಶುಕ್ರವಾರ ಅರ್ಜಿದಾರರಿಗೆ ಆದೇಶಿಸಿದೆ.

ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ನೀಡುವ ಮೂಲಕ ಇವರು ನೇಮಕಗೊಂಡಿದ್ದು, ಆ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸುವಂತೆ ಕೋರಿ ಪತ್ರಕರ್ತ ಅನಿಲ್‌ಕುಮಾರ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಆರೋಪದಲ್ಲಿ ಸತ್ಯಾಂಶ ಇದೆ ಎಂಬ ದಾಖಲೆ ನೀಡಿದರೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೀಠ ಹೇಳಿದೆ.

‘ಮೈಸೂರು ವಿವಿಯ ತಾಂತ್ರಿಕ ಎಂಜಿನಿಯರಿಂಗ್ ಪದವಿಯಲ್ಲಿ ದ್ವಿತೀಯ ದರ್ಜೆ ಪಡೆದಿರುವ ಇವರು, ಪ್ರಥಮ ದರ್ಜೆ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ, ನಾಲ್ವರು ಪಿಎಚ್‌ಡಿ ಹಾಗೂ 15 ಎಂ.ಟೆಕ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರುವ ಬಗ್ಗೆ, 2010ರ ಮಾರ್ಚ್ 5ರಂದು ಒಂದೇ ದಿನ ನಾಲ್ಕು ಪ್ರಬಂಧ ಮಂಡಿಸಿರುವ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವುದು ಇವರ ಮೇಲಿರುವ ಪ್ರಮುಖ ಆರೋಪ.

ಈ ಆರೋಪಕ್ಕೆ ಸಂಬಂಧಿಸಿದಂತೆ ವಿವಿ ನೀಡಿರುವ ಷೋಕಾಸ್ ನೋಟಿಸ್‌ಗೆ ಕಳೆದ ತಿಂಗಳು ಹೈಕೋರ್ಟ್ ತಡೆ ನೀಡಿರುವುದು ಇಲ್ಲಿ ಉಲ್ಲೇಖಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.