ಬೆಂಗಳೂರು: ನಗರದ ಹೊರವರ್ತುಲ ರಸ್ತೆಯಲ್ಲಿ ವಾಹನ ದಟ್ಟಣೆ ತಗ್ಗಿಸಲು ದೊಡ್ಡನೆಕ್ಕುಂದಿ ಬಳಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸುತ್ತಿರುವ ಏಕಪಥ ಮೇಲ್ಸೇತುವೆ ರಸ್ತೆ ಭಾಗಶಃ ಪೂರ್ಣಗೊಂಡಿದೆ. ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಇದನ್ನು ಮುಕ್ತಗೊಳಿಸಲಾಗಿದೆ.
ಬಾಗ್ಮನೆ ಟೆಕ್ ಪಾರ್ಕ್ ಬಳಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಇದನ್ನು ತಡೆಯಲು ಹಾಗೂ ಇಲ್ಲಿ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಇಲ್ಲಿ ಎರಡು ಕಡೆ ಏಕಪಥ ರಸ್ತೆಯ ಮೇಲ್ಸೇತುವೆಗಳನ್ನು ನಿರ್ಮಿಸುವ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಂಡಿತ್ತು. ಒಂದರ ಕಾಮಗಾರಿ ಈಗಾಗಲೇ ಮುಗಿದಿದ್ದು ವರ್ಷದ ಹಿಂದೆಯೇ ಲೋಕಾರ್ಪಣೆಗೊಂಡಿದೆ. ಇನ್ನೊಂದರ ಕಾಮಗಾರಿ ಅಂತಿಮ ಹಂತದಲ್ಲಿದೆ.
ಸೇತುವೆ ಮೇಲಿನ ರಸ್ತೆಗೆ ಡಾಂಬರು ಹಾಕಲಾಗಿದೆ. ಇದರ ತಡೆಗೋಡೆಗಳಿಗೆ ಪೇಂಟ್ ಬಳಿಯುವ ಕೆಲಸ ಪ್ರಗತಿಯಲ್ಲಿದೆ. ಇಲ್ಲಿ ಬೀದಿದೀಪದ ಕಂಬಗಳನ್ನು ಅಳವಡಿಸಲಾಗಿದ್ದು, ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಇದನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
‘ಬಾಗ್ಮನೆ ಟೆಕ್ ಪಾರ್ಕ್, ಗರುಡಾಚಾರ್ ಪಾಳ್ಯ, ದೊಡ್ಡನೆಕ್ಕುಂದಿ ಕಡೆಗೆ ಹೋಗುವ ವಾಹನಗಳು ಇಲ್ಲಿಂದಲೇ ಸಾಗಬೇಕು. ಹಾಗಾಗಿ ಇಲ್ಲಿನ ಸರ್ವಿಸ್ ರಸ್ತೆ ಮತ್ತು ಹೊರವರ್ತುಲ ರಸ್ತೆಯಲ್ಲಿ ನಿತ್ಯವೂ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಎರಡೂ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಳಿಕ ಈ ಸಮಸ್ಯೆ ನೀಗಲಿದೆ’ ಎಂದು ಸ್ಥಳೀಯರು ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.