ಬೆಂಗಳೂರು: ವಿಜಯಪುರದಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಸಂತ್ರಸ್ತೆಯು ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಳು. ಶಾಲೆಗೆ ಹೋಗುತ್ತಿದ್ದ ವೇಳೆಯಲ್ಲೇ ಆಕೆಯನ್ನು ಅಡ್ಡಗಟ್ಟಿದ್ದ ಮೂವರು ಆರೋಪಿಗಳು, ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಈ ಪ್ರಕರಣ ಖಂಡಿಸಿ ರಾಜ್ಯದಾದ್ಯಂತ ಹಲವರು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ವಿಜಯಪುರ, ಕಲಬುರ್ಗಿ ಬಂದ್ಗೆ ಸಹ ಕರೆ ನೀಡಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರವು, ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿತ್ತು. ಮೂವರು ಆರೋಪಿಗಳನ್ನು (ಇಬ್ಬರು ಬಾಲಕರು) ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಆರೋಪಿಯ ಸಂಬಂಧಿ ಮಹಿಳೆಯ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿದ್ದ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆ ಮಹಿಳೆ ಸದ್ಯ ತಲೆಮರೆಸಿಕೊಂಡಿದ್ದಾಳೆ. ಹೀಗಾಗಿ ಮೂವರ ವಿರುದ್ಧವಷ್ಟೇ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
‘ವಿಜಯಪುರದ ಮಂಜುನಾಥನಗರದ ಮಲ್ಲಿಕಾರ್ಜುನ್ ಸ್ಕೂಲ್ ಬಳಿ ಬಾಲಕಿ ತೆರಳುತ್ತಿದ್ದಾಗ ಕೃತ್ಯ ನಡೆದಿತ್ತು. ಈ ಪ್ರಕರಣ ಸಂಬಂಧ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ಅದನ್ನೆಲ್ಲ ಉಲ್ಲೇಖಿಸಿ ವಿಜಯಪುರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದೇವೆ’ ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.