ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ, ಅತ್ಯಾಚಾರ ಪ್ರಕರಣಗಳನ್ನು ಪರಿಣಾಮಕಾರಿ ಯಾಗಿ ತಡೆಗಟ್ಟಲು ರಾಷ್ಟ್ರೀಯ ನೀತಿ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ಹಾಗೂ ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ತಿಳಿಸಿದರು.
ವರದಿಯ ಕರಡು ಸಿದ್ಧವಾಗಿದೆ. ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸಲಾ ಗುವುದು. ಅಂದಾಜು 1,500 ಪುಟಗಳ ಈ ವರದಿಯಲ್ಲಿ 100ಕ್ಕೂ ಹೆಚ್ಚು ಶಿಫಾರಸುಗಳು ಇರಲಿವೆ ಎಂದು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಅತ್ಯಾಚಾರ, ದೌರ್ಜನ್ಯ ನಡೆಯದಂತೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಪ್ರಕರಣ ದಾಖಲಾದ ನಿಗದಿತ ಅವಧಿಯ ಒಳಗೆ ತನಿಖೆ, ವಿಚಾರಣೆ ಪೂರ್ಣಗೊಳಿಸಬೇಕು. ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಮಟ್ಟದಲ್ಲಿ ಹೊಣೆಗಾರಿಕೆ ವಹಿಸಬೇಕು. ಸಂತ್ರಸ್ತರಿಗೆ ನಗದು ರೂಪದಲ್ಲಿ ಪರಿ
ಹಾರ ನೀಡುವ ಜೊತೆಗೆ ಶಿಕ್ಷಣ, ಉದ್ಯೋಗ, ಸ್ವ ಉದ್ಯೋಗಕ್ಕೆ ನೆರವು ನೀಡುವಂತೆಯೂ ಶಿಫಾರಸು ಮಾಡಲಾಗುವುದು ಎಂದು ವಿವರಿಸಿದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳಲ್ಲಿ ಶಿಕ್ಷೆಯಾಗುತ್ತಿರುವ ಪ್ರಮಾಣ ಶೇ. 5ಕ್ಕಿಂತಲೂ ಕಡಿಮೆ. ಶಿಕ್ಷೆಯ ಪ್ರಮಾಣ ಕನಿಷ್ಠ ಶೇ 50ಕ್ಕಿಂತ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಬೇಕು. ಅದಕ್ಕೆ ಪೂರಕವಾಗಿ ಕಾನೂನಿನಲ್ಲಿ ಬದಲಾವಣೆ ತರುವಂತೆ ಸೂಚಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.