ಬೆಂಗಳೂರು: ಪರವಾನಗಿ ಪಡೆಯದ ಪ್ರಾರ್ಥನಾ ಮಂದಿರಗಳು ಧ್ವನಿವರ್ಧಕ ಬಳಕೆಯನ್ನು ಮತ್ತೂ ಮುಂದುವರಿಸಿದರೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು ಮಾಡಬೇಕಾಗುತ್ತದೆ ಎಂದು ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದೆ.
`ಇದರಿಂದ ಶಬ್ದ ಮಾಲಿನ್ಯ ಆಗುತ್ತಿದೆ ಎಂಬ ಹಿನ್ನೆಲೆಯಲ್ಲಿ, ಧ್ವನಿವರ್ಧಕದ ಬಳಕೆ ನಿಲ್ಲಿಸಲು ಕ್ರಮ ತೆಗೆದುಕೊಳ್ಳುವಂತೆ ಈ ಹಿಂದೆ ಆದೇಶ ಹೊರಡಿಸಿದರೂ ಇದುವರೆಗೆ ಏನೂ ಕ್ರಮ ತೆಗೆದುಕೊಂಡಿಲ್ಲ. ಇನ್ನು ಒಂದು ವಾರದ ಗಡುವು ನೀಡಲಾಗುವುದು. ಅಲ್ಲಿಯವರೆಗೆ ಸೂಕ್ತ ಕ್ರಮ ತೆಗೆದುಕೊಳ್ಳದೇ ಹೋದರೆ ನ್ಯಾಯಾಂಗ ನಿಂದನೆ ದಾಖಲು ಮಾಡಬೇಕಾಗುತ್ತದೆ~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ತಿಳಿಸಿದೆ.
`ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಉಪಯೋಗಿಸಬಾರದು ಎಂಬ ಕಾನೂನೇ ಇದೆ. ಈ ಕಾನೂನು ಓದಲು ಇನ್ನೂ ನಿಮಗೆ ವೇಳೆ ಸಿಕ್ಕಿಲ್ಲವೇ~ ಎಂದು ಪೀಠ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.
ಧ್ವನಿವರ್ಧಕಗಳ ವಿರುದ್ಧ `ಜಯನಗರ ನಾಗರಿಕ ಸಮಿತಿ~ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ. ವಿಚಾರಣೆ ಮುಂದೂಡಲಾಗಿದೆ.
ಸಿಬಿಐ ತನಿಖೆಗೆ ಅಸ್ತು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿಗೆ ವಂಚನೆ ಮಾಡಿರುವ ಆರೋಪ ಹೊತ್ತ ಮಾಜಿ ಸಚಿವ ಡಿ. ಸುಧಾಕರ್ ಅವರ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ತೋರಿದೆ.
ತನಿಖೆ ರದ್ದತಿಗೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಆನಂದ ವಜಾ ಮಾಡಿದ್ದಾರೆ. 2003ರಿಂದ 2006ರ ಅವಧಿಯಲ್ಲಿ ಬ್ಯಾಂಕಿಗೆ ವಂಚನೆ ಮಾಡಿರುವ ಆರೋಪ ಇವರ ಮೇಲಿದೆ.
ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಲು ಆಗದು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.